ಕಾಂಗ್ರೆಸ್ ಮತ್ತು ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಘೋಷಣೆಗಳ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ, ಕೃಷಿ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಪೂರ್ಣ ಮೌನ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಹಣಕಾಸು ಸಚಿವರು ತಮ್ಮ ಭಾಷಣವನ್ನು ಕೃಷಿಯಿಂದ ಪ್ರಾರಂಭಿಸಿದ್ದಾರೆ. ಆದರೆ, ರೈತರ ಬೇಡಿಕೆಗಳಾದ ಎಂಎಸ್ಪಿಗೆ ಕಾನೂನು ಖಾತರಿ, ಕೃಷಿ ಸಾಲ ಮನ್ನಾ, ಪಿಎಂ ಕಿಸಾನ್ ಪಾವತಿಗಳ ಹಣದುಬ್ಬರ ಸೂಚ್ಯಂಕ, ಪಿಎಂ ಫಸಲ್ ಭೀಮಾ ಯೋಜನೆಗೆ ಸುಧಾರಣೆಗಳು ಸೇರಿದಂತೆ ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ’ ಎಂದು ಕಿಡಿಕಾರಿದ್ದಾರೆ.
‘ಮೇಕ್ ಇನ್ ಇಂಡಿಯಾ’ ಎಂಬುದು ದೇಶದಲ್ಲಿ ನಕಲಿಯಾಗಿ ಮಾರ್ಪಟ್ಟಿದೆ. ಈಗ ‘ರಾಷ್ಟ್ರೀಯ ಉತ್ಪಾದನಾ ಮಿಷನ್’ ಎಂಬ ಹೊಸ ಹೆಸರು ಬಂದಿದೆ ಎಂದು ರಮೇಶ್ ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ) ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.