ADVERTISEMENT

Karnataka Budget 2021 | ಎಲ್ಲ ಜಿಲ್ಲೆಗಳಲ್ಲಿ ಗೋಶಾಲೆ: ಸಿಎಂ ಯಡಿಯೂರಪ್ಪ ಘೋಷಣೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 8:23 IST
Last Updated 8 ಮಾರ್ಚ್ 2021, 8:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಗೋ ಸಂಪತ್ತಿನ ರಕ್ಷಣೆಗಾಗಿ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

2021–22ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ‘ದೇಶೀಯ ಪಶು ಸಂಪತ್ತಿನ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ದೇಶೀಯ ಗೋ ಸಂಪತ್ತಿನ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ತರಬೇತಿ ನೀಡಲು ಹೆಸರಘಟ್ಟದಲ್ಲಿ ಥೀಮ್ ಪಾರ್ಕ್ ಸ್ಥಾಪನೆ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.

ನಂದಿ ದುರ್ಗ ಮೇಕೆ ತಳಿಗಳನ್ನು ಅಭಿವೃದ್ಧಿಪಡಿಸಿ ಉತ್ಕೃಷ್ಟ ದರ್ಜೆಯ ಹೋತ ವಿತರಿಸಲು ₹1 ಕೋಟಿ ಅನುದಾನ ನೀಡಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಪಶುವೈದ್ಯಕೀಯ ವಿಜ್ಞಾನದಲ್ಲಿ ಆಯುರ್ವೇದ ಔಷಧಿಗಳ ಅಳವಡಿಕೆ ಉತ್ತೇಜನಕ್ಕೆ ಶಿವಮೊಗ್ಗದ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ಕಾಲೇಜಿನಲ್ಲಿ ₹2 ಕೋಟಿ ವೆಚ್ಚದಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸುವ ಬಗ್ಗೆಯೂ ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಇದರ ಬೆನ್ನಲ್ಲೇ ಬಜೆಟ್‌ನಲ್ಲಿ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ನಿರ್ಮಾಣ ಯೋಜನೆ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.