ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಇಂದು (ಶುಕ್ರವಾರ) 16ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿನ ಸಾರಿಗೆ ಸಂಪರ್ಕವನ್ನು ಸಧೃಡಗೊಳಿಸಲು ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ.
2024-25 ನೇ ಸಾಲಿನಲ್ಲಿ ನಾಲ್ಕು ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಒಟ್ಟಾರೆಯಾಗಿ 2,381 ಡೀಸೆಲ್ ಬಸ್ಗಳು ಹಾಗೂ 716 ವಿದ್ಯುತ್ ಚಾಲಿತ ಬಸ್ಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ತಿಳಿಸಿದ್ದಾರೆ.
2025–26ನೇ ಸಾಲಿನಲ್ಲಿ ಸ್ವಚ್ಚ ಪರಿಸರದ ಹಿತದೃಷ್ಟಿಯಿಂದ ವಿದ್ಯುತ್ ಚಾಲಿತ ಬಸ್ಗಳನ್ನು ಸೇರ್ಪಡೆ ಮಾಡಲು ಆದ್ಯತೆ ನೀಡಲಾಗುತ್ತಿದ್ದು, ಪಿಎಂ ಇ–ಡ್ರೈವ್, ಪಿಎಂ –ಇಬಸ್ ಸೇವಾ (PM E-DRIVE, PM-eBus Sewa) ಮತ್ತು ಬಾಹ್ಯ ನೆರವಿನ ಯೋಜನೆಯಡಿ ಒಟ್ಟಾರೆ 14,750 ಹೊಸ ವಿದ್ಯುತ್ ಚಾಲಿತ ಬಸ್ಗಳನ್ನು ಸೇರ್ಪಡೆ ಮಾಡುವ ಗುರಿ ಹೊಂದಿದ್ದು, ಇದರಲ್ಲಿ 9,000 ಬಸ್ಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರ್ಪಡೆ ಮಾಡಲು ಉದ್ದೇಶಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದ ವಿವಿಧ ಸಾರಿಗೆ ನಿಗಮಗಳಲ್ಲಿ 1,000 ಹೊಸ ಡೀಸೆಲ್ ಬಸ್ಗಳನ್ನು ಜಿಸಿಸಿ (GCC) ಆಧಾರದಲ್ಲಿ ಸೇರ್ಪಡೆಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಾರಿಗೆ ನಿಗಮಗಳಿಗೆ ಆರ್ಥಿಕ ಚೈತನ್ಯ ತುಂಬುವ ಉದ್ದೇಶದಿಂದ ₹2,000 ಕೋಟಿ ಸಾಲವನ್ನು ಹಣಕಾಸು ಸಂಸ್ಥೆಗಳಿಂದ ಪಡೆಯಲು ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರದ ಖಾತರಿ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಹಾಗೂ ಸಾರಿಗೆ ನಿಗಮಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಸಕ್ತ ವರ್ಷ ಬೆಂಗಳೂರು ಪೂರ್ವ ಭಾಗದ ಕೆ.ಆರ್.ಪುರಂನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದಲ್ಲಿ ಹೊಸ ಸ್ಯಾಟಲೈಟ್ ಬಸ್ ನಿಲ್ದಾಣವನ್ನು ನಿರ್ಮಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.
ಮೈಸೂರಿನ ಬನ್ನಿಮಂಟಪದಲ್ಲಿ ಆತ್ಯಾಧುನಿಕ ಬಸ್ ನಿಲ್ದಾಣವನ್ನು ಒಟ್ಟಾರೆ ₹120 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.