ಬೆಂಗಳೂರು: ಹದಿನೆಂಟು ವರ್ಷದ ಒಳಗಿನ ಎಲ್ಲ ಮಕ್ಕಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರತ್ಯೇಕ ಬಜೆಟ್ ಮಂಡಿಸಿದ್ದು, ಇದು ಒಂದು ಇತಿಹಾಸ ಎಂದು ಹೇಳಿಕೊಂಡಿದ್ದಾರೆ.
ಆದರೆ, ₹ 36,340 ಕೋಟಿಯ 279 ಕಾರ್ಯಕ್ರಮಗಳನ್ನು ಪ್ರಸ್ತಾಪಿಸಿರುವುದು ಬಿಟ್ಟರೆ ಅದರ ವಿವರಗಳನ್ನು ನೀಡಿಲ್ಲ. ಹೀಗಾಗಿ ಇಷ್ಟು ದೊಡ್ಡ ಮೊತ್ತದ ವಿನಿಯೋಗದ ಕುರಿತಂತೆ ಕುತೂಹಲ ಉಳಿದುಕೊಂಡಿದೆ.
ರಾಜ್ಯದಲ್ಲಿ ಹೊಸದಾಗಿ ಏಳು ಬಾಲಮಂದಿರಗಳ ಸ್ಥಾಪನೆಗಾಗಿ ₹ 5.67 ಕೋಟಿ ಅನುದಾನ, ನೆರೆ ಹಾವಳಿಯಿಂದ ಹಾನಿಗೊಳಗಾದ 842 ಅಂಗನವಾಡಿ ಕೇಂದ್ರಗಳ ಪುನರ್ನಿರ್ಮಾಣಕ್ಕಾಗಿ ₹ 138 ಕೋಟಿ ನೀಡಲಾಗುತ್ತದೆ.
ಸಮಾಜದ ಶೋಷಿತ ವರ್ಗದವರಿಗೆ ಆಶ್ರಯ ನೀಡುವ ಸುಧಾರಣಾ ಸಂಸ್ಥೆಗಳನ್ನು ಒಂದು ಮಾಸ್ಟರ್ ಪ್ಲಾನ್ ತಯಾರಿಸಿ ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲು ₹ 5 ಕೋಟಿ ಅನುದಾನ ಮೀಸಲಿಡಲಾಗಿದೆ. ಬಾಲಮಂದಿರದಲ್ಲಿ 21 ವರ್ಷ ತುಂಬಿದ ನಂತರ ಬಿಡುಗಡೆ ಹೊಂದುವವರಿಗೆ ಉದ್ಯೋಗ ಪ್ರಾರಂಭಿಸಲು, ತಿಂಗಳಿಗೆ ₹ 5 ಸಾವಿರದಂತೆ ಗರಿಷ್ಠ ಮೂರು ವರ್ಷದವರೆಗೆ ಆರ್ಥಿಕ ನೆರವು ನೀಡುವ ‘ಉಪಕಾರ’ ಯೋಜನೆ ಜಾರಿಗೊಳಿಸಲಾಗುತ್ತದೆ. ಕೌಶಲಾಭಿವೃದ್ಧಿ ಇಲಾಖೆಯಿಂದ ತರಬೇತಿಗಾಗಿ ₹ 1 ಕೋಟಿ ಅನುದಾನ ನೀಡಲಾಗುತ್ತದೆ.
ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಪೂರೈಸುವ ಮಹಿಳಾ ಪೂರಕ ಪೌಷ್ಟಿಕ ಉತ್ಪಾದನಾ ಕೇಂದ್ರಗಳ ಸಾಮರ್ಥ್ಯ ಹೆಚ್ಚಿಸಲು ₹ 20 ಲಕ್ಷದವರೆಗೆ ಬಡ್ಡಿರಹಿತ ಸಾಲ ನೀಡಲು ₹ 20 ಕೋಟಿ ಅನುದಾನ ಒದಗಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.