
ಪ್ರಧಾನಿ ನರೇಂದ್ರ ಮೋದಿ
–ಪಿಟಿಐ ಚಿತ್ರ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇತ್ತೀಚೆಗೆ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (ಮನರೇಗಾ) ಕಾಯ್ದೆಯನ್ನು ಮಾರ್ಪಾಡಿಸುವ ಮೂಲಕ ಗಾಂಧಿ ಹೆಸರು ಕೈಬಿಟ್ಟಿದ್ದರ ಕುರಿತು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಆಕ್ರೋಶ ಹೊರಹಾಕಿದ್ದವು.
ಇದೀಗ, ವಿರೋಧ ಪಕ್ಷಗಳಿಗೆ ತಿರುಗೇಟು ನೀಡುವ ಉದ್ದೇಶದಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಾವು ಮಂಡಿಸಿದ ಬಜೆಟ್ನಲ್ಲಿ ‘ಮಹಾತ್ಮ ಗಾಂಧಿ’ ಹೆಸರಿನಲ್ಲಿ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿರುವುದಾಗಿ ಘೋಷಿಸಿದ್ದಾರೆ.
ಖಾದಿ, ಕೈಮಗ್ಗ ಮತ್ತು ಕರಕುಶಲ ವಲಯವನ್ನು ಬಲಪಡಿಸುವ ಉದ್ದೇಶದಿಂದ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ’ಯನ್ನು ಜಾರಿಗೆ ತರುವುದಾಗಿ ನಿರ್ಮಲಾ ಪ್ರಕಟಿಸಿದ್ದಾರೆ.
‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ’ಯ ಮೂಲಕ ಖಾದಿ ಉದ್ಯಮ ಮತ್ತು ಕರಕುಶಲ ವಸ್ತುಗಳ ಉತ್ಪಾದನೆ, ತರಬೇತಿ, ಕೌಶಲಾಭಿವೃದ್ಧಿ ಮತ್ತು ಜಾಗತಿಕ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದೂ ಅವರು ವಿವರಿಸಿದ್ದಾರೆ.
‘ಒಂದು ಜಿಲ್ಲೆ, ಒಂದು ಉತ್ಪನ್ನ ಪರಿಕಲ್ಪನೆಯಡಿಯಲ್ಲಿ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ’ ಅನುಷ್ಠಾನಕ್ಕೆ ಬರಲಿದೆ. ನೇಕಾರರು, ಗ್ರಾಮೀಣ ಕೈಗಾರಿಕೆಗಳು, ಗ್ರಾಮೀಣ ಪ್ರದೇಶದಲ್ಲಿರುವ ಯುವಕರಿಗೆ ಈ ಯೋಜನೆಯಿಂದ ಉತ್ತೇಜನ ಸಿಗಲಿದೆ. ಗ್ರಾಮೀಣ ಪ್ರದೇಶದ ಜನರ ಜೀವನಶೈಲಿಯನ್ನು ಬದಲಾಯಿಸಲು ಈ ಯೋಜನೆ ನೆರವಾಗಲಿದೆ. ಜತೆಗೆ, ಭಾರತದ ಪಾರಂಪರಿಕ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಸಹಾಯವಾಗಲಿದೆ‘ ಎಂದೂ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ಈಚೆಗೆ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ’ (ಮನರೇಗಾ) ಕಾಯ್ದೆಯನ್ನು ಮಾರ್ಪಾಡು ಮಾಡುವ ಮೂಲಕ ಹೊಸದಾಗಿ ‘ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಗ್ರಾಮೀಣ’ (ವಿಬಿ– ಜಿ ರಾಮ್ ಜಿ) ಕಾಯ್ದೆಯನ್ನು ಪರಿಚಯಿಸಿತ್ತು.
ಮನರೇಗಾ ಕಾಯ್ದೆಯಿಂದ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ತೆಗೆದು ಹಾಕಿದ್ದನ್ನು ಖಂಡಿಸಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.