
ನವದೆಹಲಿ: ಸಂಸತ್ನ ಬಜೆಟ್ ಅಧಿವೇಶನದ ಅಂಗವಾಗಿ ಶಾಸನಗಳಿಗೆ ಸಂಬಂಧಿಸಿದಂತೆ ಮತ್ತು ಕಾರ್ಯಸೂಚಿಗಳ ಕುರಿತು ಚರ್ಚಿಸಲು ಸರ್ಕಾರ ಇದೇ 27ರಂದು ಸರ್ವಪಕ್ಷಗಳ ಸಭೆ ಕರೆದಿದೆ.
‘ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸರ್ವಪಕ್ಷ ಸಭೆ ಕರೆದಿದ್ದಾರೆ. ಮಂಗಳವಾರ ಬೆಳಗ್ಗೆ 11ಕ್ಕೆ ಸಂಸತ್ ಭವನದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಲಿದೆ’ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಜನವರಿ 28ರಿಂದ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸದನಗಳ ಸದಸ್ಯರನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದಾರೆ.
‘ವಿಬಿ–ಜಿ ರಾಮ್ ಜಿ‘
ಕೋಲಾಹಲ ಸಾಧ್ಯತೆ ಬಜೆಟ್ ಅಧಿವೇಶನದಲ್ಲಿ ವಿಬಿ– ಜಿ ರಾಮ್ ಜಿ ಕಾಯ್ದೆಯ ಕುರಿತು ವಿಪಕ್ಷ ಮತ್ತು ಆಡಳಿತ ಪಕ್ಷಗಳ ನಡುವೆ ಕೋಲಾಹಲ ನಡೆಯುವ ಸಾಧ್ಯತೆ ಇದೆ.
ನರೇಗಾವನ್ನು ಬದಲಿಸಿ ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಆಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆಯನ್ನಾಗಿ ಪರಿವರ್ತಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ದೇಶವ್ಯಾಪಿ ಹೋರಾಟ ಮಾಡುತ್ತಿದೆ. ಈ ಸಂದರ್ಭದಲ್ಲೇ ಬಜೆಟ್ ಅಧಿವೇಶನ ಆರಂಭಗೊಳ್ಳುತ್ತಿದೆ.
ಕಾಂಗ್ರೆಸ್ ನಡೆಸುತ್ತಿರುವ ಹೋರಾಟಕ್ಕೆ ಪ್ರತಿಯಾಗಿ ಬಿಜೆಪಿ ಕೂಡಾ ಹೊಸ ಕಾಯ್ದೆ ಕುರಿತು ಅಭಿಯಾನ ನಡೆಸುತ್ತಿದ್ದು ಹಳೆಯ ಕಾಯ್ದೆಯ ಲೋಪಗಳನ್ನು ಸರಿಪಡಿಸಲಾಗಿದೆ. ಇದೊಂದು ಸುಧಾರಣಾವಾದಿ ಕಾಯ್ದೆ ಎಂದು ಸಮರ್ಥಿಸಿಕೊಳ್ಳುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.