ADVERTISEMENT

ನವ ಕರ್ನಾಟಕ ನಿರ್ಮಾಣದ ಬಜೆಟ್‌: ಸಚಿವ ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2022, 14:57 IST
Last Updated 4 ಮಾರ್ಚ್ 2022, 14:57 IST
ಚಿವ ಪ್ರಲ್ಹಾದ ಜೋಶಿ
ಚಿವ ಪ್ರಲ್ಹಾದ ಜೋಶಿ   

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ನಲ್ಲಿ ಕೃಷಿ, ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಒಳಗೊಂಡಂತೆ ಒಟ್ಟಾರೆಯಾಗಿ ಎಲ್ಲಾ ಕ್ಷೇತಗಳಿಗೆ ಆದ್ಯತೆ ನೀಡಲಾಗಿದೆ. ರಾಜ್ಯವನ್ನು ಸರ್ವತೋಮುಖ ಅಭಿವೃದ್ಧಿಯತ್ತ ಕೊಂಡೊಯ್ಯುವ ಗುರಿ ಹೊಂದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದ್ದಾರೆ.

ಆರೋಗ್ಯ, ಕೃಷಿ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಿರುವುದಷ್ಟೇ ಅಲ್ಲದೇ, ಮೊದಲ ಬಾರಿಗೆ ಮಹಿಳಾ ಸಬಲೀಕರಣ ಹಾಗೂ ಮಕ್ಕಳ ಶ್ರೇಯೋಭಿವೃದ್ಧಿಗೆ ವಿಶೇಷ ಯೋಜನೆ ಘೋಷಿಸಿದ್ದಾರೆ. ರಾಜ್ಯದ ಎಲ್ಲ ಪ್ರದೇಶಗಳಿಗೆ ಸಮತೋಲನದ ಅನುದಾನ ನೀಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ₹31,000 ಕೋಟಿ ಅನುದಾನ ನೀಡುವ ಮೂಲಕ 7 ನೂತನ ಮಾದರಿ ವಿಶ್ವವಿದ್ಯಾಲಯಗಳ ಸ್ಥಾಪನೆ, ಜಿಲ್ಲಾ ಕೇಂದ್ರಗಳಲ್ಲಿ ನೀಟ್ ಪರಿಕ್ಷಾ ತರಬೇತಿ ಕೇಂದ್ರಗಳ ಹಾಗೂ ವಿಶೇಷವಾಗಿ ಐಐಟಿ ಮಾದರಿಯಲ್ಲಿ ಕೆಐಟಿ ಸ್ಥಾಪಿಸುವಂತಹ ಕ್ರಮ ಮಾದರಿ ಹೆಜ್ಜೆಯಾಗಿದೆ ಎಂದಿದ್ದಾರೆ.

ರಾಜ್ಯದ ರೈಲ್ವೆ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಾಗಿದ್ದು, ಧಾರವಾಡ–ಕಿತ್ತೂರು-ಬೆಳಗಾವಿ ಹೊಸ ಮಾರ್ಗ ನಿರ್ಮಾಣ ಹಾಗೂ ಗದಗ-ಯಲವಿಗಿ, ತುಮಕೂರು-ದಾವಣಗೆರೆ ನೂತನ ಮಾರ್ಗಗಳಿಗೆ ಅನುದಾನ ಘೋಷಿಸಲಾಗಿದೆ. ಕಳಸಾ ಬಂಡೂರಿ ನೀರಾವರಿ ಯೋಜನೆಗೆ ₹1,000 ಕೋಟಿ, ಮಾವು ಬೆಳೆ ಮಾರುಕಟ್ಟೆಗೆ ಬೆಂಬಲ, ಧಾರವಾಡ ಕಸೂತಿ ಸೀರೆಗಳ ಕಲೆಗೆ ವಿಶೇಷ ಪ್ರೋತ್ಸಾಹ ಮತ್ತು ನವಲಗುಂದ ಜಮಖಾನೆ ಕ್ಲಸ್ಟರ್ ಸ್ಥಾಪನೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ಕೊಟ್ಟಿದ್ದು ಗಮನಾರ್ಹ ಎಂದಿದ್ದಾರೆ.

ADVERTISEMENT

ಬೊಮ್ಮಾಯಿ ಅವರು ಮಂಡಿಸಿದ ಚೊಚ್ಚಲ ಬಜೆಟ್‌ ಪ್ರಧಾನಿ ನರೇಂದ್ರ ಮೋದಿ ಅವರ ನವಭಾರತ ಹಾಗೂ ಆತ್ಮನಿರ್ಭರ ಭಾರತ ಕಲ್ಪನೆಯ ಪ್ರತಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.