ಹುಬ್ಬಳ್ಳಿ: ‘ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕ ಹೆಚ್ಚಳ ವಿರೋಧಿಸಿ ಡಿ. 21ರಂದು ರಾಜ್ಯದಾದ್ಯಂತ ಸಾಂಕೇತಿಕವಾಗಿ ಎಪಿಎಂಸಿ ಬಂದ್ ಮಾಡಲು ನಿರ್ಧರಿಸಲಾಗಿದೆ’ ಎಂದು ರಾಜ್ಯ ಎಪಿಎಂಸಿ ಕ್ರಿಯಾಸಮಿತಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ತಿಳಿಸಿದರು.
ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಎಪಿಎಂಸಿ ವ್ಯಾಪಾರಸ್ಥರ ಸಭೆಯ ನಂತರ ಮಾತನಾಡಿದ ಅವರು, ‘ಶೇ 0. 35 ಇದ್ದ ಕೃಷಿ ಉತ್ಪನ್ನ ಮಾರುಕಟ್ಟೆ ಶುಲ್ಕವನ್ನು ಸರ್ಕಾರ ಏಕಾಏಕಿ ಶೇ 1ಕ್ಕೆ ಹೆಚ್ಚಳ ಮಾಡಿದೆ. ಕೋವಿಡ್ನಿಂದ ವ್ಯಾಪಾರ, ವಹಿವಾಟುಗಳು ಸರಿಯಾಗಿ ನಡೆಯದೆ ವರ್ತಕರು ತೀವ್ರ ಸಮಸ್ಯೆ ಅನುಭವಿಸಿದ್ದರು. ವ್ಯಾಪಾರ ಚೇತರಿಕೆ ಕಾಣುವಾಗ ಮಾರುಕಟ್ಟೆ ಶುಲ್ಕ ಹೆಚ್ಚಳ ಮಾಡಿರುವುದು ಸರಿಯಲ್ಲ. ಇದನ್ನು ವಿರೋಧಿಸಿ ಸೋಮವಾರ ರಾಜ್ಯದಾದ್ಯಂತ ಎಪಿಎಂಸಿ ಬಂದ್ಗೆ ಕರೆ ನೀಡಲಾಗಿದೆ’ ಎಂದರು.
‘ಡಿ. 23ರಂದು ಬೆಂಗಳೂರಿನಲ್ಲಿ ಎಫ್ಕೆಸಿಸಿಐ ಹಾಗೂ ಕೆಸಿಸಿಐ ನೇತೃತ್ವದಲ್ಲಿ ರಾಜ್ಯದ ಎಪಿಎಂಸಿ ವರ್ತಕರ ಸಂಘದ ಪದಾಧಿಕಾರಿಗಳ ಜೊತೆ ಸಭೆ ನಡೆಸಲಿದ್ದೇವೆ. ಶುಲ್ಕ ಹೆಚ್ಚಳ ಹಿಂಪಡೆಯಲು ವಿನಂತಿಸಿ ಸಚಿವರಿಗೆ ಮನವಿ ಸಲ್ಲಿಸುತ್ತೇವೆ. ಬೇಡಿಕೆ ಈಡೇರದಿದ್ದರೆ ಅನಿರ್ದಿಷ್ಟಾವಧಿ ಎಪಿಎಂಸಿ ಬಂದ್ ಮಾಡಲು ನಿರ್ಣಯ ಕೈಗೊಳ್ಳುತ್ತೇವೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.