ವಾರಾಣಸಿ: ವಾರಾಣಸಿ– ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆವೊಡ್ಡಿದ ಕೆನಡಾ ಪ್ರಜೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ವಾರಾಣಸಿ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಂಧಿತ ಪ್ರಯಾಣಿಕ ವಿಮಾನದೊಳಗೆ ಬಾಂಬ್ ಹೊತ್ತೊಯ್ಯುತ್ತಿದ್ದ ಎಂದು ಹೇಳಲಾಗಿದೆ. ಈ ಬಗ್ಗೆ ಇಂಡಿಗೊ ಸಿಬ್ಬಂದಿ, ವಿಮಾನ ಸಂಚಾರ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಆತನ ಬಳಿ ಪತ್ತೆಯಾಗಿಲ್ಲ ಎಂದು ಹೇಳಲಾಗಿದೆ.
ಬಾಂಬ್ ಬೆದರಿಕೆಯಿಂದಾಗಿ ವಿಮಾನದೊಳಗೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ವಿಮಾನವನ್ನು ಪ್ರತ್ಯೇಕವಾಗಿ ನಿಲುಗಡೆ ಮಾಡಿ ತಪಾಸಣೆ ನಡೆಸಲಾಯಿತು.
‘ತಪಾಸಣೆ ಪೂರ್ಣಗೊಂಡ ಬಳಿಕ ನಿರ್ಗಮನಕ್ಕೆ ಅನುಮತಿ ನೀಡಲಾಗಿದ್ದು, ವಿಮಾನವು ಬೆಂಗಳೂರಿಗೆ ಹಾರಾಟ ಆರಂಭಿಸಿತು. ಈ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಲಾಗಿದೆ’ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಪುನೀತ್ ಗುಪ್ತಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.