ಲಾರಿಯಲ್ಲಿ ಕಬ್ಬು ತುಂಬಿರುವ ದೃಶ್ಯ
ನವದೆಹಲಿ: ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಪ್ರತಿ ಕ್ವಿಂಟಲ್ಗೆ ಪಾವತಿಸಬೇಕಿರುವ ಮೊತ್ತವನ್ನು ಕೇಂದ್ರ ಸರ್ಕಾರ ₹15 ಹೆಚ್ಚಿಸಿದೆ. ಈ ವರ್ಷದ ಅಕ್ಟೋಬರ್ನಿಂದ ಆರಂಭವಾಗುವ 2025–26ನೇ ಹಂಗಾಮಿನಲ್ಲಿ ಕಾರ್ಖಾನೆಗಳು ಕ್ವಿಂಟಲ್ಗೆ ₹355 ಪಾವತಿಸಬೇಕಿದೆ.
ಕಬ್ಬು ರೈತರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ನ್ಯಾಯಸಮ್ಮತ ಹಾಗೂ ಪ್ರೋತ್ಸಾಹದಾಯಕ ದರವನ್ನು (ಎಫ್ಆರ್ಪಿ) ಶೇ 4.41 ಹೆಚ್ಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
2024-25ನೇ ಹಂಗಾಮಿನಲ್ಲಿ ಕಬ್ಬಿನ ಎಫ್ಆರ್ಪಿಯನ್ನು ಕ್ವಿಂಟಲ್ಗೆ ₹340 ಕ್ಕೆ ನಿಗದಿಪಡಿಸಲಾಗಿತ್ತು.
ಸಕ್ಕರೆ ವಲಯವು ಪ್ರಮುಖ ಕೃಷಿ ಆಧಾರಿತ ವಲಯ. ಈ ವಲಯದಲ್ಲಿ ಸುಮಾರು 5 ಕೋಟಿ ಕಬ್ಬು ರೈತರು ಮತ್ತು ಅವರ ಅವಲಂಬಿತರು ಹಾಗೂ ಸಕ್ಕರೆ ಕಾರ್ಖಾನೆಗಳಲ್ಲಿ ನೇರವಾಗಿ ಕೆಲಸ ಮಾಡುತ್ತಿರುವ 5 ಲಕ್ಷ ಕಾರ್ಮಿಕರು ಇದ್ದಾರೆ. ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಶಿಫಾರಸುಗಳ ಆಧಾರದಲ್ಲಿ, ರಾಜ್ಯ ಸರ್ಕಾರಗಳು ಮತ್ತು ಇತರ ಪಾಲುದಾರರೊಂದಿಗೆ ಸಮಾಲೋಚಿಸಿದ ಬಳಿಕ ಎಫ್ಆರ್ಪಿ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗಾರರಿಗೆ ತಿಳಿಸಿದರು.
ಹೆದ್ದಾರಿ ಅಭಿವೃದ್ಧಿ: ಮೇಘಾಲಯದ ಮಾವ್ಲಿಂಗ್ಖುಂಗ್ನಿಂದ (ಶಿಲ್ಲಾಂಗ್ ಬಳಿ) ಅಸ್ಸಾಂನ ಪಂಚಗ್ರಾಮ್ ವರೆಗಿನ (ಸಿಲ್ಚಾರ್ ಬಳಿ) ಗ್ರೀನ್ಫೀಲ್ಟ್ ಹೈಸ್ಪೀಡ್ ಕಾರಿಡಾರ್ ಅನ್ನು ಅಭಿವೃದ್ಧಿಪಡಿಸಲು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಅನುಮೋದನೆ ನೀಡಿದೆ. 166.89 ಕಿ.ಮೀ. ಉದ್ದದ ಹೆದ್ದಾರಿ ಅಭಿವೃದ್ಧಿಗೆ ₹ 22,864 ಕೋಟಿ ವೆಚ್ಚ ಆಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.