
ನವದೆಹಲಿ: ರಸ್ತೆ ಅಪಘಾತಗಳಲ್ಲಿ ಗಾಯಾಳು ಆಗುವವರಿಗೆ ನಗದು ರಹಿತವಾಗಿ ಚಿಕಿತ್ಸೆ ಒದಗಿಸುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರವೇ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ತಿಳಿಸಿದ್ದಾರೆ.
ಈ ಸೌಲಭ್ಯವನ್ನು ಸಚಿವಾಲಯವು 2024ರ ಮಾರ್ಚ್ನಲ್ಲಿ ಪ್ರಾಯೋಗಿಕವಾಗಿ ಚಂಡೀಗಢದಲ್ಲಿ ಆರಂಭಿಸಿತು. ನಂತರ ಇದನ್ನು ಆರು ರಾಜ್ಯಗಳಿಗೆ ವಿಸ್ತರಣೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರು ಇದನ್ನು ರಾಷ್ಟ್ರದ ಎಲ್ಲೆಡೆಗೆ ವಿಸ್ತರಿಸುವ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.
ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ದೊರಕದೆ ಪ್ರಾಣಹಾನಿ ಸಂಭವಿಸುವುದನ್ನು ತಡೆಯುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಈ ಯೋಜನೆಯ ಅಡಿಯಲ್ಲಿ ಗಾಯಾಳುಗಳು ತಲಾ ₹1.5 ಲಕ್ಷದವರೆಗೆ, ಅಪಘಾತ ನಡೆದ ದಿನದಿಂದ ಏಳು ದಿನಗಳವರೆಗೆ ನಗದು ರಹಿತವಾಗಿ ಚಿಕಿತ್ಸೆ ಪಡೆಯಲು ಅರ್ಹರಾಗಿರುತ್ತಾರೆ. ದೇಶದ ಯಾವುದೇ ರಸ್ತೆಯಲ್ಲಿ ಮೋಟಾರು ವಾಹನಗಳಿಂದ ಉಂಟಾಗುವ ಅಪಘಾತಗಳಲ್ಲಿ ಗಾಯಗೊಂಡವರು ಈ ಸೌಲಭ್ಯಕ್ಕೆ ಅರ್ಹರಾಗಲಿದ್ದಾರೆ.
ಆದರೆ 2024ರ ಮಾರ್ಚ್ನಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಆರಂಭವಾದ ನಂತರದಲ್ಲಿ ನಗದು ರಹಿತ ಚಿಕಿತ್ಸೆಗಾಗಿ ಬಂದ ಕೋರಿಕೆಗಳ ಪೈಕಿ ಸರಿಸುಮಾರು ಶೇ 20ರಷ್ಟು ತಿರಸ್ಕೃತಗೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.