ಮುಂಬೈ:‘ಕ್ರಿಪ್ಟೊ ಕರೆನ್ಸಿಗಳಲ್ಲಿ ಹೂಡಿಕೆ ಮಾಡುವ ಖಾತೆ ತೆರೆಯಲು ಸಾಲ ನೀಡಲಾಗುತ್ತಿದೆ ಎಂಬ ಮಾಹಿತಿ ಬಂದಿದೆ’ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಮಂಗಳವಾರ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕ್ರಿಪ್ಟೊ ಕರೆನ್ಸಿಗಳಲ್ಲಿ ನಡೆಯುವ ವಹಿವಾಟಿನ ಮೊತ್ತವು ಹೆಚ್ಚಾಗಿದ್ದರೂ ಅವುಗಳ ವಹಿವಾಟು ನಡೆಸುತ್ತಿರುವ ಖಾತೆಗಳ ಸಂಖ್ಯೆಯನ್ನು ಉತ್ಪ್ರೇಕ್ಷೆ ಮಾಡಿ ಹೇಳಲಾಗುತ್ತಿದೆ ಎಂದಿದ್ದಾರೆ.
ದೇಶದ ಆರ್ಥಿಕ ಸ್ಥಿರತೆಗೆ ಧಕ್ಕೆ ತರಬಲ್ಲ ಸಂಗತಿಗಳು ಕ್ರಿಪ್ಟೊ ಕರೆನ್ಸಿಗಳ ಜೊತೆ ಬೆಸೆದುಕೊಂಡಿವೆ ಎಂದು ಅವರು ಹೇಳಿದ್ದಾರೆ.‘ಆಂತರಿಕವಾಗಿ ವಿಸ್ತೃತ ಚರ್ಚೆ ನಡೆಸಿದ ನಂತರ ಆರ್ಬಿಐ, ಹಣಕಾಸಿನ ಸ್ಥಿರತೆಗೆ ಸಂಬಂಧಿಸಿದಂತೆ ಕಳವಳ ಇದೆ ಎಂದು ಹೇಳಿತ್ತು. ಈ ಬಗ್ಗೆ ಇನ್ನಷ್ಟು ಆಳವಾದ ಚರ್ಚೆಗಳು ಬೇಕು’ ಎಂದು ದಾಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕ್ರಿಪ್ಟೊ ಕರೆನ್ಸಿಗಳಲ್ಲಿ ಹಣ ಹೂಡಿಕೆ ಮಾಡಿದರೆ ಭಾರಿ ಮೊತ್ತದ ಲಾಭ ಸಿಗುತ್ತದೆ ಎಂದು ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ ಎಂಬ ಕಳವಳ ಇದೆ. ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಪ್ಟೊ ಕರೆನ್ಸಿಗಳ ಬಗ್ಗೆ ಚರ್ಚಿಸಲು ಈಚೆಗೆ ಸಭೆ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.