ಬಾಗಲಕೋಟೆ/ಬೆಳಗಾವಿ: ಈರುಳ್ಳಿ ದರದಲ್ಲಿ ಭಾರಿ ಕುಸಿತ ಆಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಬೆಳಗಾವಿ ಹಾಗೂ ಬಾಗಲಕೋಟೆಯ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ರೈತರು ಶನಿವಾರ ದಿಢೀರ್ ಪ್ರತಿಭಟನೆ ನಡೆಸಿದರು.
ಬಾಗಲಕೋಟೆಯ ಎಪಿಎಂಸಿಯಲ್ಲಿ ಪ್ರತಿ ಕ್ವಿಂಟಲ್ಗೆ ₹ 200 ಬೆಲೆ ನಿಗದಿ ಮಾಡಿದ್ದರಿಂದ ಸಿಟ್ಟಿಗೆದ್ದ ಬೆಳೆಗಾರರು, ಎಪಿಎಂಸಿ ವೃತ್ತದಲ್ಲಿಈರುಳ್ಳಿ ಸುರಿದು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
‘ಸಾವಿರಾರು ರೂಪಾಯಿ ಖರ್ಚು ಮಾಡಿ ಈರುಳ್ಳಿ ಬೆಳೆಯಲಾಗಿದೆ. ಆದರೆ, ಕಡಿಮೆ ದರ ನಿಗದಿ ಮಾಡಲಾಗುತ್ತಿದೆ. ಇದರಿಂದ ರೈತರಿಗೆ ನಷ್ಟವಾಗುತ್ತಿದೆ. ಅಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ಅನ್ನದಾತರ ಕಷ್ಟ ಅರ್ಥವಾಗುತ್ತಿಲ್ಲ. ರೈತರಿಗೆ ಆಗುವ ಮೋಸದ ಬಗ್ಗೆ ಯಾರಿಗೂ ಗಮನವಿಲ್ಲದಂತಾಗಿದೆ. ಹೀಗಾದರೆ, ರೈತ ಬದಕುವುದು ಹೇಗೆ’ ಎಂದು ಪ್ರಶ್ನಿಸಿದರು. ‘ಕೆಲ ದಿನಗಳ ಹಿಂದೆ ಈರುಳ್ಳಿ ಬೆಲೆ ಪ್ರತಿ ಕ್ವಿಂಟಲ್ಗೆ ₹1,500 ಇತ್ತು. ಶನಿವಾರ ₹ 50 ರಿಂದ ₹500 ಆಗಿದೆ. ರೈತರ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ಬರುತ್ತದೆ’ ಎಂದು ಬೆಳಗಾವಿಯಲ್ಲಿ ರೈತ ಎಂ.ಎಂ. ಲಮಾಣಿ ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.