ADVERTISEMENT

ಕೋವಿಡ್‌ ಎರಡನೇ ಅಲೆಯಿಂದ 30 ಲಕ್ಷ ಉದ್ಯೋಗ ನಷ್ಟ: ಎಫ್‌ಕೆಸಿಸಿಐ

ಎಂಎಸ್‌ಎಂಇಗಳಿಗೆ ₹ 20 ಸಾವಿರ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್‌ಗೆ ಮನವಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 11:35 IST
Last Updated 17 ಜೂನ್ 2021, 11:35 IST
ಪೆರಿಕಲ್ ಎಂ. ಸುಂದರ್
ಪೆರಿಕಲ್ ಎಂ. ಸುಂದರ್   

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕದ ಎರಡನೇ ಅಲೆಯಿಂದಾಗಿ ರಾಜ್ಯದಲ್ಲಿ ಅಂದಾಜು 30 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್‌ಕೆಸಿಸಿಐ) ಅಧ್ಯಕ್ಷ ಪೆರಿಕಲ್‌ ಎಂ. ಸುಂದರ್ ಗುರುವಾರ ಹೇಳಿದರು.

ಕೈಗಾರಿಕೆಗಳು, ಸಣ್ಣಪುಟ್ಟ ವ್ಯಾಪಾರಸ್ಥರು, ಮಾಲ್‌ಗಳು, ಅಂಗಡಿಗಳು ಸೇರಿದಂತೆ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ಪರಿಗಣಿಸಿದರೆ ರಾಜ್ಯದಲ್ಲಿ ಈ ಪ್ರಮಾಣದ ಉದ್ಯೋಗ ನಷ್ಟ ಆಗಿದೆ ಎಂದು ಅವರು ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಂಕ್ರಾಮಿಕದಿಂದಾಗಿ ರಾಜ್ಯದ ಉದ್ಯಮಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಸಹಜ ಸ್ಥಿತಿಗೆ ಬರಲು ಕನಿಷ್ಠ ಎರಡು ವರ್ಷ ಬೇಕಾಗಲಿದೆ. ಹೀಗಾಗಿ ಕಿರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ (ಎಂಎಸ್‌ಎಂಇ) ₹ 20 ಸಾವಿರ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್‌ ಘೋಷಿಸುವಂತೆ ಮುಖ್ಯಮಂತ್ರಿಗೆ ಬೇಡಿಕೆ ಸಲ್ಲಿಸಲಾಗಿದೆ’ ಎಂದರು. ಕಾರ್ಮಿಕರು ಕೆಲಸದ ಸ್ಥಳಕ್ಕೆ ಬರಲು ಅನುಕೂಲ ಆಗುವಂತೆ ಸಾರ್ವಜನಿಕ ಸಾರಿಗೆಯನ್ನು ಆರಂಭಿಸುವಂತೆ ಸರ್ಕಾರವನ್ನು ಮತ್ತೊಮ್ಮೆ ಒತ್ತಾಯಿಸಲಾಗಿದೆ ಎಂದರು.

ADVERTISEMENT

‘₹ 75 ಸಾವಿರ ಕೋಟಿ ನಷ್ಟ’: ರಾಜ್ಯದಲ್ಲಿ ತಿಂಗಳಿಗೆ ಸುಮಾರು ₹ 50 ಸಾವಿರ ಕೋಟಿ ಮೌಲ್ಯದ ವಾಣಿಜ್ಯ ವಹಿವಾಟು ನಡೆಯುತ್ತದೆ. ಎರಡನೇ ಅಲೆ ನಿಯಂತ್ರಿಸಲು ರಾಜ್ಯದಲ್ಲಿ ಮೇ ಮತ್ತು ಜೂನ್‌ ತಿಂಗಳಿನಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲಾಯಿತು. ಇದರಿಂದಾಗಿ ಕೈಗಾರಿಕೆ, ವಾಣಿಜ್ಯ ಮತ್ತು ವ್ಯಾಪಾರ ವಲಯವು ಸುಮಾರು ₹ 75 ಸಾವಿರ ಕೋಟಿ ಮೌಲ್ಯದ ವಹಿವಾಟು ನಷ್ಟ ಅನುಭವಿಸಿದೆ ಎಂದು ಸುಂದರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.