ADVERTISEMENT

ತೈಲ ಬೆಲೆ ನಿಯಂತ್ರಣಕ್ಕೆ ಮಧ್ಯಪ್ರವೇಶ: ಕೇಂದ್ರ

ಪಿಟಿಐ
Published 15 ಮಾರ್ಚ್ 2022, 14:07 IST
Last Updated 15 ಮಾರ್ಚ್ 2022, 14:07 IST
   

ನವದೆಹಲಿ (ಪಿಟಿಐ): ಜಾಗತಿಕ ಮಟ್ಟದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದ್ದು, ಜನಸಾಮಾನ್ಯರ ಹಿತಾಸಕ್ತಿ ರಕ್ಷಿಸುವ ಉದ್ದೇಶದಿಂದ ಇಂಧನ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸಲು ಜಾಗರೂಕತೆಯಿಂದ ಮಧ್ಯಪ್ರವೇಶ ಮಾಡಲಾಗುವುದು ಎಂದು ಕೇಂದ್ರ ಸರ್ಕಾರವು ಮಂಗಳವಾರ ಹೇಳಿದೆ.

ಕಚ್ಚಾ ತೈಲದ ಬೆಲೆಯಲ್ಲಿನ ಏರಿಕೆ ಅಥವಾ ಇಳಿಕೆಯು ಸಗಟು ಬೆಲೆ ಸೂಚ್ಯಂಕದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಇಂಧನ ಮತ್ತು ವಿದ್ಯುತ್ ವಿಭಾಗಗಳ ಮೇಲೆ ನೇರ ಪರಿಣಾಮ ಉಂಟುಮಾಡುತ್ತದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ರಾಜ್ಯಸಭೆಯಲ್ಲಿ ಹೇಳಿದ್ದಾರೆ.

ಉಕ್ರೇನ್ ಬಿಕ್ಕಟ್ಟಿನಿಂದ ಉಂಟಾಗಿರುವ ತೈಲ ಬೆಲೆ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಲು ಕೇಂದ್ರ ಸರ್ಕಾರವು ಎಕ್ಸೈಸ್ ಸುಂಕವನ್ನು ತಗ್ಗಿಸಲಿದೆಯೇ ಎಂಬ ಪ್ರಶ್ನೆಗೆ ಸಚಿವರು, ‘ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ, ವಿನಿಮಯ ದರ, ತೆರಿಗೆ ಮಟ್ಟ, ಸಾಗಣೆ ವೆಚ್ಚ ಆಧರಿಸಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುತ್ತವೆ’ ಎಂದು ಉತ್ತರಿಸಿದ್ದಾರೆ.

ADVERTISEMENT

‘ಕೇಂದ್ರ ಸರ್ಕಾರವು ಈ ಎಲ್ಲ ಅಂಶಗಳ ಬಗ್ಗೆ ಹಾಗೂ ಜಾಗತಿಕ ಮಟ್ಟದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಜನಸಾಮಾನ್ಯರ ಹಿತವನ್ನು ಕಾಯಲು, ಅಗತ್ಯ ಎದುರಾದಾಗ ಕೇಂದ್ರವು ಎಚ್ಚರಿಕೆಯಿಂದ ಮಧ್ಯಪ್ರವೇಶ ಮಾಡಲಿದೆ’ ಎಂದು ಅವರು ಉತ್ತರದಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.