ನವದೆಹಲಿ: ‘ಮನೆಯಲ್ಲಿ ಕುಳಿತು ಎಷ್ಟು ಹೊತ್ತು ಹೆಂಡತಿಯ ಮುಖ ನೋಡಿಕೊಡು ಇರುತ್ತೀರಿ. ವಾರದಲ್ಲಿ 90 ಗಂಟೆ ಕೆಲಸ ಮಾಡಬೇಕು. ಶ್ರಮವಹಿಸಿ ದುಡಿಯಲು ಭಾನುವಾರದ ರಜೆಯನ್ನೂ ತ್ಯಜಿಸಬೇಕು’ ಎಂದು ಎಲ್ ಆ್ಯಂಡ್ ಟಿ ಕಂಪನಿ ಮುಖ್ಯಸ್ಥ ಎಸ್.ಎನ್. ಸುಬ್ರಹ್ಮಣ್ಯನ್ ಹೇಳಿದ್ದಾರೆ.
ವಾರದಲ್ಲಿ 70 ಗಂಟೆ ಕೆಲಸ ಮಾಡಬೇಕು ಎಂದು ಇನ್ಫೊಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಅವರ ಹೇಳಿಕೆಯು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಸುಬ್ರಹ್ಮಣ್ಯನ್ ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ವಾರದಲ್ಲಿ ಶನಿವಾರ ಮತ್ತು ಭಾನುವಾರ ಕೂಡ ರಜೆ ನೀಡಬೇಕು ಎಂದು ಒತ್ತಾಯಿಸಿದ್ದ ಕಂಪನಿಯ ಉದ್ಯೋಗಿಗಳನ್ನು ಉದ್ದೇಶಿಸಿ ಅವರು ಮಾತನಾಡಿರುವ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
‘ನಿಮ್ಮಿಂದ ಭಾನುವಾರ ಕೂಡ ಕೆಲಸ ಮಾಡಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ನನಗೆ ವಿಷಾದವಾಗುತ್ತಿದೆ. ನಾನು ಭಾನುವಾರವೂ ಕೆಲಸ ಮಾಡುತ್ತೇನೆ. ಅಂದು ಕೂಡ ನಿಮ್ಮಿಂದ ಕೆಲಸ ಮಾಡಿಸಲು ನನ್ನಿಂದ ಸಾಧ್ಯವಾದರೆ ನಾನು ಹೆಚ್ಚು ಸಂತೋಷ ಪಡುತ್ತೇನೆ’ ಎಂದು ವಿಡಿಯೊದಲ್ಲಿ ಹೇಳಿದ್ದಾರೆ. ಆದರೆ, ಯಾವ ದಿನದಂದು ಈ ಹೇಳಿಕೆ ನೀಡಿದ್ದಾರೆ ಎಂಬುದು ತಿಳಿದುಬಂದಿಲ್ಲ.
‘ನೀವು ಮನೆಯಲ್ಲಿ ಕುಳಿತು ಏನು ಮಾಡುತ್ತೀರಿ. ಎಷ್ಟು ಹೊತ್ತು ಹೆಂಡತಿಯ ಮುಖ ನೋಡುತ್ತೀರಿ. ಆಕೆ ಕೂಡ ಎಷ್ಟು ಹೊತ್ತು ನಿಮ್ಮ ಮುಖ ನೋಡಿಕೊಂಡು ಇರುತ್ತಾರೆ. ಹಾಗಾಗಿ, ಕಚೇರಿಗೆ ಬಂದು ಕೆಲಸ ಮಾಡಿ’ ಎಂದು ಹೇಳಿದ್ದಾರೆ.
ಅಧ್ಯಕ್ಷರ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಕಂಪನಿಯು ಈ ಕುರಿತು ಸ್ಪಷ್ಟನೆ ನೀಡಿದೆ. ‘ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕಿದೆ. ಈ ನಿಟ್ಟಿನಲ್ಲಿ ಶ್ರಮವಹಿಸಿ ಕೆಲಸ ಮಾಡುವ ಬಗ್ಗೆ ಅಧ್ಯಕ್ಷರು ಒತ್ತಿ ಹೇಳಿದ್ದಾರೆ’ ಎಂದು ಪ್ರತಿಕ್ರಿಯಿಸಿದೆ.
ಸುಭದ್ರ ರಾಷ್ಟ್ರ ನಿರ್ಮಾಣವೇ ಎಲ್ ಆ್ಯಂಡ್ ಟಿ ಕಂಪನಿ ಧ್ಯೇಯ. ಕಳೆದ ಎಂಟು ದಶಕದಿಂದಲೂ ಇದೇ ಹಾದಿಯಲ್ಲಿ ಸಾಗಿದೆ. ದೇಶದಲ್ಲಿ ಮೂಲಸೌಕರ್ಯ, ಕೈಗಾರಿಕೆ ಮತ್ತು ತಂತ್ರಜ್ಞಾನದ ಸಾಮರ್ಥ್ಯ ವೃದ್ಧಿಗೆ ಒತ್ತು ನೀಡಿದೆ ಎಂದು ಕಂಪನಿಯ ವಕ್ತಾರರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.