ಮೈಸೂರು:‘ಮಂದಗತಿಯ ಆರ್ಥಿಕ ಪ್ರಗತಿಯಿಂದಾಗಿ ರಾಜ್ಯದಲ್ಲಿ ಸುಮಾರು 15 ರಿಂದ 20 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ’ ಎಂದು ಕರ್ನಾಟಕ ಸಣ್ಣ ಕೈಗಾರಿಕಾ ಸಂಘದ (ಕಾಸಿಯಾ) ಅಧ್ಯಕ್ಷ ಆರ್.ರಾಜು ಹೇಳಿದ್ದಾರೆ.
‘ರಾಜ್ಯದಲ್ಲಿ ಶೇ 30ರಷ್ಟು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (ಎಸ್ಎಂಇ) ಬಾಗಿಲು ಮುಚ್ಚಿವೆ. ಕೆಲವು ಕೈಗಾರಿಕೆಗಳು ಭಾಗಶಃ ಮುಚ್ಚಿದ್ದು, ಕಾರ್ಮಿಕರ ಕೆಲಸದ ಅವಧಿಯನ್ನು ಕಡಿತಗೊಳಿಸಿವೆ’ ಎಂದು ಅವರು ಮೈಸೂರಿನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಕೇಂದ್ರ ಸರ್ಕಾರದ ತಪ್ಪು ನೀತಿಗಳು ಆರ್ಥಿಕ ಹಿಂಜರಿತಕ್ಕೆ ಕಾರಣ. ಆರ್ಥಿಕ ಮಂದಗತಿ ಪ್ರಗತಿಯು ಇನ್ನೂ ಎರಡು ವರ್ಷ ಮುಂದುವರಿಯುವ ಸಾಧ್ಯತೆ ಇದೆ. ಸರ್ಕಾರ ತಕ್ಷಣವೇ ಎಚ್ಚೆತ್ತುಕೊಳ್ಳದಿದ್ದರೆ, ಇನ್ನಷ್ಟು ಕಾರ್ಮಿಕರು ಬೀದಿಗೆ ಬೀಳಲಿದ್ದಾರೆ’ ಎಂದು ಆತಂಕ ವ್ಯಕ್ತಪಡಿಸಿದರು.
‘ಗಾರ್ಮೆಂಟ್ಸ್ ಮತ್ತು ಆಟೊಮೊಬೈಲ್ ಕ್ಷೇತ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಆಟೊಮೊಬೈಲ್ ಮತ್ತು ಇತರ ಕೈಗಾರಿಕೆಗಳಲ್ಲಿನ ಮಂದಗತಿಯು, ಬಿಡಿಭಾಗಗಳನ್ನು ಪೂರೈಸುತ್ತಿರುವ ‘ಎಸ್ಎಂಇ’ಗಳ ಮೇಲೆ ನೇರ ಪರಿಣಾಮ ಬೀರಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.