ನವದೆಹಲಿ: ಕೆಲವು ವ್ಯಕ್ತಿಗಳು ಹಾಗೂ ಸಂಸ್ಥೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಜಾಹೀರಾತಿನ ಮೂಲಕ ನಿಗಮದ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಈ ಕುರಿತು ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಭಾರತೀಯ ಜೀವ ವಿಮಾ ನಿಗಮವು (ಎಲ್ಐಸಿ) ಎಚ್ಚರಿಕೆ ನೀಡಿದೆ.
ಪಾಲಿಸಿದಾರರು ಹಾಗೂ ಸಾರ್ವಜನಿಕರು ಇಂತಹ ಜಾಹೀರಾತುಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಜೊತೆಗೆ, ಅವುಗಳ ಸತ್ಯಾಸತ್ಯತೆ ಬಗ್ಗೆ ಪರೀಕ್ಷಿಸಬೇಕು ಎಂದು ‘ಎಕ್ಸ್’ನಲ್ಲಿ ಮನವಿ ಮಾಡಿದೆ.
ಕೆಲವರು ನಿಗಮದ ವಿರುದ್ಧ ಅಪಪ್ರಚಾರ ಮಾಡುವುದರಲ್ಲಿ ಕಾರ್ಯ ನಿರತರಾಗಿದ್ದಾರೆ. ಈ ಕೃತ್ಯಕ್ಕಾಗಿ ನಿಗಮದ ಹಿರಿಯ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳ ಫೋಟೊಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ನಿಗಮದ ಹೆಸರು ಮತ್ತು ಲೊಗೊವನ್ನೂ ಬಳಸಿಕೊಳ್ಳುತ್ತಿದ್ದಾರೆ. ಸುಲಭವಾಗಿ ಮೋಸಗೊಳಿಸುವಂತೆ ಇಂತಹ ಜಾಹೀರಾತುಗಳಿಗೆ ಪಾಲಿಸಿದಾರರು ಮರುಳಾಗಬಾರದು ಎಂದು ಕೋರಿದೆ.
ಇಂತಹ ಜಾಹೀರಾತುಗಳ ಬಗ್ಗೆ ಗಮನಕ್ಕೆ ಬಂದರೆ ಆ ಪುಟದ ಯುಆರ್ಎಲ್ (ಯೂನಿಫಾರ್ಮ್ ರಿಸೋರ್ಸ್ ಲೊಕೇಟರ್) ಕಾಪಿ ಮಾಡಿ, ಎಲ್ಐಸಿಯ ಅಧಿಕೃತ ಸಾಮಾಜಿಕ ಜಾಲತಾಣಗಳಿಗೆ ಪೇಸ್ಟ್ ಮಾಡಬೇಕು ಎಂದು ಮನವಿ ಮಾಡಿದೆ.
ನಿಗಮದ ಬ್ರ್ಯಾಂಡ್ ಮೌಲ್ಯಕ್ಕೆ ಧಕ್ಕೆ ತರುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.