ಮುಂಬೈ: ಇರಾನ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಘೋಷಣೆಯಿಂದ ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ತಗ್ಗಿರುವುದು ದೇಶದ ಷೇರುಪೇಟೆಯಲ್ಲಿ ಷೇರುಗಳ ಖರೀದಿ ಹೆಚ್ಚಳಕ್ಕೆ ಕಾರಣವಾಯಿತು. ಹೀಗಾಗಿ, ಸೂಚ್ಯಂಕಗಳು ಬುಧವಾರದ ವಹಿವಾಟಿನಲ್ಲಿ ಏರಿಕೆ ಕಂಡವು.
ಎಚ್ಡಿಎಫ್ಸಿ ಬ್ಯಾಂಕ್, ಇನ್ಫೊಸಿಸ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ನ ಷೇರುಗಳ ಖರೀದಿ ಹೆಚ್ಚಳವು ಸೂಚ್ಯಂಕಗಳ ಏರಿಕೆಗೆ ನೆರವಾದವು. ಅಲ್ಲದೆ, ಉದ್ಯಮಿಗಳಾದ ಮುಕೇಶ್ ಅಂಬಾನಿ ಮತ್ತು ಗೌತಮ್ ಅದಾನಿ ತೈಲ ಮಾರಾಟಕ್ಕೆ ಒಪ್ಪಂದ ಮಾಡಿಕೊಂಡಿರುವುದು ಸಹ ಸೂಚ್ಯಂಕಗಳ ಏರಿಕೆಗೆ ನೆರವಾದವು ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 700 ಅಂಶ ಹೆಚ್ಚಳವಾಗಿ, 82,755ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ 200 ಅಂಶ ಏರಿಕೆಯಾಗಿ, 25,244ಕ್ಕೆ ಕೊನೆಗೊಂಡಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 1.21ರಷ್ಟು ಏರಿಕೆಯಾಗಿದೆ. ಪ್ರತೀ ಬ್ಯಾರೆಲ್ಗೆ 67.95 ಡಾಲರ್ ಆಗಿದೆ.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮಂಗಳವಾರದ ವಹಿವಾಟಿನಲ್ಲಿ ₹5,266 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಇದೇ ವೇಳೆ ದೇಶಿ ಸಾಂಸ್ಥಿಕ ಹೂಡಿಕೆದಾರರು ₹5,209 ಕೋಟಿ ಮೌಲ್ಯದ ಷೇರುಗಳನ್ನು ಖರೀದಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.