ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲವನ್ನು ಭಾರತಕ್ಕೆ ಆಮದು ಮಾಡಿಕೊಳ್ಳುವ ವಿಚಾರವಾಗಿ ಹಲವು ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಷ್ಯಾ ದೇಶವು ಭಾರತಕ್ಕೆ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ನೀಡುತ್ತದೆ ಎಂಬ ವಿಚಾರ ವರದಿಯಾಗಿತ್ತು. ಆದರೆ, ಇದನ್ನು ಕಾರ್ಯರೂಪಕ್ಕೆ ತರುವುದು ಹೇಗೆ ಎಂಬುದನ್ನು ನೋಡಬೇಕಿದೆ’ ಎಂದು ಹೇಳಿದರು.
‘ಹಲವು ಅಂಶಗಳನ್ನು ಇಲ್ಲಿ ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ರಷ್ಯಾದಿಂದ ಕಚ್ಚಾ ತೈಲವನ್ನು ಯಾವ ಬಂದರಿನ ಮೂಲಕ, ಯಾವ ಬಂದರಿಗೆ ತರಿಸಿಕೊಳ್ಳಬಹುದು ಎಂಬುದನ್ನು ಪರಿಶೀಲಿಸಬೇಕು. ಅವುಗಳಿಗೆ ಸೂಕ್ತ ವಿಮೆ ಸಿಗುತ್ತದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ನಿರ್ಮಲಾ ವಿವರಿಸಿದರು.
‘ಸಂಬಂಧಪಟ್ಟ ಸಚಿವಾಲಯವು ಈ ವಿಚಾರವನ್ನು ಪರಿಶೀಲಿಸುತ್ತ ಇದೆ. ನಾನು ಅವರ ಜೊತೆ ಸಂಪರ್ಕದಲ್ಲಿ ಇದ್ದೇನೆ’ ಎಂದೂ ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.