ನವದೆಹಲಿ: ಅಡುಗೆ ಅನಿಲ ಸಿಲಿಂಡರ್ಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡಿದ್ದರಿಂದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಆಗಿರುವ ನಷ್ಟ ಸರಿದೂಗಿಸಲು ಕೇಂದ್ರ ಸರ್ಕಾರವು ಶೀಘ್ರ ₹35 ಸಾವಿರ ಕೋಟಿ ನೀಡುವ ಸಾಧ್ಯತೆ ಇದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್ಪಿಸಿಎಲ್) ಕಳೆದ 15 ತಿಂಗಳಿನಿಂದ ಅಡುಗೆ ಅನಿಲ ಸಿಲಿಂಡರ್ಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆಗೆ ಮಾರಾಟ ಮಾಡುತ್ತಿವೆ.
ಕೇಂದ್ರ ಹಣಕಾಸು ಸಚಿವಾಲಯವು ನಿಖರವಾದ ನಷ್ಟದ ಮಾಹಿತಿ ಮತ್ತು ಅದನ್ನು ಹೇಗೆ ಸರಿದೂಗಿಸುವುದು ಎಂಬುದರ ಕಾರ್ಯವಿಧಾನವನ್ನು ರೂಪಿಸುತ್ತಿದೆ ಎಂದು ಹೇಳಿದ್ದಾರೆ.
ಫೆಬ್ರುವರಿ 1ರಂದು ಮಂಡಿಸಿದ ಬಜೆಟ್ನಲ್ಲಿ ಕೇಂದ್ರ ಸರ್ಕಾರವು ಈ ನಷ್ಟವನ್ನು ಸರಿದೂಗಿಸಲು ಹಣ ಮೀಸಲಿಟ್ಟಿಲ್ಲ. ಏಪ್ರಿಲ್ನಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಎಕ್ಸೈಸ್ ಸುಂಕವನ್ನು ಹೆಚ್ಚಿಸಿದೆ. ಇದರಿಂದಾಗಿ ಕೇಂದ್ರಕ್ಕೆ ಹೆಚ್ಚುವರಿಯಾಗಿ ₹32 ಸಾವಿರ ಕೋಟಿ ಸಿಗಲಿದೆ. ಈ ಹಣವನ್ನೇ ನಷ್ಟ ಸರಿದೂಗಿಸಿಕೊಳ್ಳಲು ನೀಡುವ ಸಾಧ್ಯತೆ ಇದೆ ಎಂದು ಅಧಿಕಾರಿ ಹೇಳಿದ್ದಾರೆ.
ಸರ್ಕಾರ ಇತ್ತೀಚೆಗೆ ಮನೆ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ₹50 ಹೆಚ್ಚಳ ಮಾಡಿತ್ತು. ಇದು ಕಂಪನಿಗಳಿಗೆ ಉಂಟಾಗುವ ನಷ್ಟದ ಮೊತ್ತವನ್ನು ತಗ್ಗಿಸಿತು. 2024–25ನೇ ಆರ್ಥಿಕ ವರ್ಷದಲ್ಲಿ ಕಡಿಮೆ ದರದಲ್ಲಿ ಎಲ್ಪಿಜಿ ಮಾರಾಟ ಮಾಡಿದ್ದರಿಂದಾಗಿ ತೈಲ ಮಾರಾಟ ಕಂಪನಿಗಳು ಅಂದಾಜು ₹40,500 ಕೋಟಿ ನಷ್ಟ ಕಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.