ಅಹಮದಾಬಾದ್: ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಳಕ್ಕೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರದಲ್ಲಿ ಆಗಿರುವ ಏರಿಕೆಯೇ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರವು ಪ್ರತಿ ಬ್ಯಾರಲ್ಗೆ 70 ಡಾಲರ್ಗಳನ್ನು ದಾಟಿರುವುದೇ ಇದಕ್ಕೆ ಮುಖ್ಯ ಕಾರಣ. ಭಾರತವು ತನ್ನ ಅಗತ್ಯದ ಶೇಕಡ 80ರಷ್ಟು ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ಹೀಗಾಗಿ ದೇಶದ ಗ್ರಾಹಕರ ಮೇಲೆ ನಕಾರಾತ್ಮಕ ಪರಿಣಾಮ ಉಂಟಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ಪೆಟ್ರೋಲ್, ಡೀಸೆಲ್ ದರದಲ್ಲಿ ಆಗುತ್ತಿರುವ ಏರಿಕೆಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಕಂಪನಿಯು ವಡೋದರಾದಲ್ಲಿ ತೈಲ ಸಂಸ್ಕರಣಾಗಾರದ ಸಾಮರ್ಥ್ಯ ಹೆಚ್ಚಿಸಲು ಮುಂದಾಗಿದೆ. ಈ ಸಂಬಂಧ ಗುಜರಾತ್ ಸರ್ಕಾರ ಮತ್ತು ಕಂಪನಿಯ ಮಧ್ಯೆ ಸೋಮವಾರ ಗಾಂಧಿನಗರದಲ್ಲಿ ಒಪ್ಪಂದ ಏರ್ಪಟ್ಟಿದ್ದು, ಈ ಸಂದರ್ಭದಲ್ಲಿ ಪ್ರಧಾನ್ ಉಪಸ್ಥಿತರಿದ್ದರು.
ಪೆಟ್ರೋಲ್, ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ತರಲು ಅವರು ಸಹಮತ ವ್ಯಕ್ತಪಡಿಸಿದ್ದಾರೆ. ‘ಈ ಉತ್ಪನ್ನಗಳ ಬೆಲೆಯು ಜಾಗತಿಕ ಮಾರುಕಟ್ಟೆಯ ನಿಯಂತ್ರಣಕ್ಕೆ ಒಳಪಟ್ಟಿವೆ. ತೈಲವನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕು ಎನ್ನುವುದು ನನ್ನ ಅಭಿಪ್ರಾಯ. ಆದರೆ, ಜಿಎಸ್ಟಿ ಮಂಡಳಿಯ ಸದಸ್ಯರು ಒಮ್ಮತಕ್ಕೆ ಬಂದರೆ ಮಾತ್ರ ಇದು ಸಾಧ್ಯ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.