ನವದೆಹಲಿ: 'ಕೊರೊನಾ ವೈರಾಣು ಪಿಡುಗು ಒಡ್ಡಿರುವ ಆರ್ಥಿಕ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವ ತುರ್ತು ಅಗತ್ಯ ಇದೆ’ ಎಂದು ಬಾಂಗ್ಲಾದೇಶದ ಗ್ರಾಮೀಣ ಬ್ಯಾಂಕ್ ಸ್ಥಾಪಕ ಮುಹಮ್ಮದ್ ಯೂನುಸ್ ಅಭಿಪ್ರಾಯಪಟ್ಟಿದ್ದಾರೆ.
ಕಿರು ಹಣಕಾಸು ಸಂಸ್ಥೆಗಳು ಏರ್ಪಡಿಸಿದ್ದ ಆನ್ಲೈನ್ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ‘ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಕಿರು ಹಣಕಾಸು ಸಂಸ್ಥೆಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಸ್ವತಂತ್ರ ಮತ್ತು ಸದೃಢ ಗ್ರಾಮೀಣ ಆರ್ಥಿಕತೆಯು ಹಳ್ಳಿಗಳಿಂದ ನಗರಗಳಿಗೆ ಜನರು ವಲಸೆ ಹೋಗುವುದನ್ನು ತಡೆಗಟ್ಟಲಿದೆ. ಮುಂಬರುವ ವರ್ಷಗಳಲ್ಲಿ ನಗರಗಳಿಂದ ಗ್ರಾಮೀಣ ಪ್ರದೇಶಕ್ಕೆ ವಲಸೆಗೆ ಅವಕಾಶ ಮಾಡಿಕೊಡಲಿದೆ’ ಎಂದು ಹೇಳಿದ್ದಾರೆ.
’ಗ್ರಾಮೀಣ ಪ್ರದೇಶದಲ್ಲಿ ಉದ್ಯಮಶೀಲತೆ ಬೆಳೆಯಲು, ಹೊಸ ಉದ್ಯಮಿಗಳನ್ನು ಸೃಷ್ಟಿಸಲು ಕಿರು ಹಣಕಾಸು ಕಂಪನಿಗಳು ಬಂಡವಾಳ ಹೂಡಿಕೆಯ ಅಗತ್ಯ ಪೂರೈಸಬೇಕು’ ಎಂದು ಕಿವಿಮಾತು ಹೇಳಿದ್ದಾರೆ. ಇವರು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತರೂ ಆಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.