ಬಾಗಲಕೋಟೆ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ(ಎಂಎಸ್ಪಿ) ಪ್ರತಿ ಕ್ವಿಂಟಲ್ ತೊಗರಿಗೆ ₹6,100 ದರ ನಿಗದಿಪಡಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್ಗೆ ₹5,675 ಕೊಟ್ಟರೆ, ರಾಜ್ಯ ಸರ್ಕಾರ ಪ್ರೋತ್ಸಾಹ ಧನದ ರೂಪದಲ್ಲಿ ₹425 ನೀಡಲಿದೆ.
ತೊಗರಿ ಬೆಳೆಯುವ ಕಲಬುರ್ಗಿ, ಬೀದರ್, ಯಾದಗಿರಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಬೆಳಗಾವಿ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಡಿ.24ರಿಂದ ಜ.7ರವರೆಗೆ ರೈತರ ನೋಂದಣಿ ಕಾರ್ಯ ನಡೆಯಲಿದ್ದು, ನಂತರ ಪ್ರತೀ ರೈತರಿಂದ 10 ಕ್ವಿಂಟಲ್ ಖರೀದಿ ಮಾಡಲಾಗುತ್ತದೆ ಎಂದು ಬಾಗಲಕೊಟೆ ಎಪಿಎಂಸಿ ಕಾರ್ಯದರ್ಶಿ ಶಂಕರ ಪತ್ತಾರ ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ 15.29 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆಯಲಾಗಿದ್ದು, 10.19 ಲಕ್ಷ ಟನ್ ಉತ್ಪಾದನೆ ನಿರೀಕ್ಷಿಸಲಾಗಿದೆ.
ಹೆಸರು ಖರೀದಿ ಮತ್ತೆ ಆರಂಭ: ಹೆಚ್ಚುವರಿಯಾಗಿ 5,000 ಟನ್ ಹೆಸರು ಖರೀದಿಸಲು ಮತ್ತೆ ಚಾಲನೆ ನೀಡಲಾಗಿದೆ.
ಈಗಾಗಲೇ ನೋಂದಣಿ ಮಾಡಿಸಿ ಬಾಕಿ ಉಳಿದಿರುವ ರೈತರಿಂದ ಡಿ.24ರಿಂದ ಜ.7ರವರೆಗೆ ಖರೀದಿಸಲು ಆದೇಶ ಹೊರಡಿಸಲಾಗಿದೆ.ಕಲಬುರ್ಗಿ, ಬೀದರ್, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಹೆಸರು ಕಾಳು ಖರೀದಿಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.