ತುಮಕೂರು: ಷೇರು ಮಾರುಕಟ್ಟೆ ಆಧಾರಿತ ನಿವೃತ್ತಿ ಯೋಜನೆ ಜಾರಿ ವಿರೋಧಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದರು.ಅಂಗನವಾಡಿ ಕಾರ್ಯಕರ್ತೆಯರಿಗೆ ಎಲ್ಐಸಿ ಆಧಾರಿತ ನಿವೃತ್ತ ವೇತನ ಜಾರಿ ಮಾಡಬೇಕೆಂದು ಆಗ್ರಹಿಸಿ ಹೋರಾಟ ನಡೆಸುತ್ತಾ ಬಂದಿದ್ದರೂ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದೆ.
ಅಂಗನವಾಡಿ ನೌಕರರ ಭವಿಷ್ಯ ನಿಧಿ ಹಣವನ್ನು ಷೇರು ಮಾರುಕಟ್ಟೆಯಲ್ಲಿ ತೊಡಗಿಸುವ ಮೂಲಕ ನೌಕರರ ಬದುಕಿನೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.
ವಿಮೆ ಆಧಾರಿತ ಯೋಜನೆ ಜಾರಿಯಾಗುವವರೆಗೆ ನೌಕರರನ್ನು ನಿವೃತ್ತಿ ಮಾಡಬಾರದು. ಈಗ ನಿವೃತ್ತರಾಗುತ್ತಿರುವ ಕಾರ್ಯಕರ್ತೆಯರಿಗೆ ರೂ. 1 ಲಕ್ಷ ಮತ್ತು ಸಹಾಯಕಿಯರಿಗೆ ರೂ. 50 ಸಾವಿರ ಪರಿಹಾರ ಹಾಗೂ ಮಾಸಿಕ ನಿವೃತ್ತಿ ವೇತನ ನೀಡಬೇಕು.
ಸರ್ಕಾರ ಈಗಾಗಲೇ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿ ಮನವಿ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಕಮಲಾ, ಪ್ರಧಾನ ಕಾರ್ಯದರ್ಶಿ ಆದಿಲಕ್ಷ್ಮೀ ಮುಂತಾದವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.