ಚಿಕ್ಕಮಗಳೂರು: ಹಳದಿ ಎಲೆ ರೋಗ ಮತ್ತು ವಿವಿಧ ಸಮಸ್ಯೆಗಳಿಂದ ಸಂಕಷ್ಟಕ್ಕೆ ಸಿಲುಕಿರುವ ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ಮುಖಂಡರು ಶನಿವಾರ ಸಂಸದ ಜಯಪ್ರಕಾಶ್ ಹೆಗ್ಡೆ ಮೂಲಕ ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಿದರು.
ಹಳದಿ ಎಲೆ ರೋಗಕ್ಕೆ ತುತ್ತಾಗಿರುವ ಅಡಿಕೆ ತೋಟಗಳ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಗೋರಖ್ಸಿಂಗ್ ನೇತೃತ್ವದಲ್ಲಿ ಸಮಿತಿ ರಚಿಸಿ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಕೆಂಪು ಅಡಿಕೆ ಸತತವಾಗಿ ಮೂರು ವರ್ಷಗಳಿಂದ ಬೆಲೆ ಕುಸಿತದಿಂದಾಗಿ ಉತ್ಪಾದನೆ ಕುಂಠಿತವಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಬರಗಾಲ ಪರಿಸ್ಥಿತಿ ಎದುರಾಗಿರುವ ಜಿಲ್ಲೆಯಲ್ಲಿ ಕೊಳವೆ ಬಾವಿಗಳಲ್ಲಿ ಸಂಪೂರ್ಣವಾಗಿ ನೀರು ಬತ್ತಿಹೋಗಿ, ಶೇಕಡಾ 90ರಷ್ಟು ತೋಟಗಳು ಒಣಗಿ ಹೋಗಿವೆ. ಈ ಭಾಗದ ವಾಣಿಜ್ಯ ಬೆಳೆ ಅಡಿಕೆಗೂ ಸಮಸ್ಯೆಯಾಗಿ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅವರ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದರು.
ಕೇಂದ್ರ ಸರ್ಕಾರ ಕೂಡಲೇ ಗೋರಖ್ಸಿಂಗ್ ಸಮಿತಿಯ ವರದಿ ಅನುಷ್ಠಾನಗೊಳಿಸಬೇಕು. ರೈತರ ಸಮಸ್ಯೆಗೆ ಪರಿಹಾರ ನೀಡುವಾಗ ಒಣಗಿರುವ ಮರಕ್ಕೆ ಕನಿಷ್ಠ 1 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡುವ ಜತೆಗೆ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಎಐಕೆಎಸ್ ಅಧ್ಯಕ್ಷ ಎನ್.ಆರ್. ಮಂಜುನಾಥ್, ಕಾರ್ಯದರ್ಶಿ ವಿಜಯಕುಮಾರ್, ಸಿಪಿಐ ಜಿಲ್ಲಾ ಕಾರ್ಯದರ್ಶಿ ರೇಣುಕಾರಾಧ್ಯ ಸೇರಿದಂತೆ ಹಲವರು ಮುಖಂಡರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.