ADVERTISEMENT

ಅರ್ಥಪೂರ್ಣ ರಾಜ್ಯೋತ್ಸವಕ್ಕೆ ಸಲಹೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2011, 19:30 IST
Last Updated 19 ಅಕ್ಟೋಬರ್ 2011, 19:30 IST

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಸಮಾರಂಭ ಆಚರಣೆ ಕುರಿತ ಪೂರ್ವಭಾವಿ ಸಭೆ ತಹಸೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ಅಧ್ಯಕ್ಷ ಬಿ.ಸಂಪತ್‌ಕುಮಾರ್ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಸಭೆಯಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಅರ್ಥಪೂರ್ಣವಾಗಿ ಅಚರಿಸುವ ಕುರಿತು ವೇದಿಕೆ ಸಮಿತಿ, ಸಾಂಸ್ಕೃತಿಕ ಸಮಿತಿ, ಸನ್ಮಾನ ಸಮಿತಿಗಳನ್ನು ರಚಿಸಲಾಯಿತು. ನಗರದ ಭಗತ್‌ಸಿಂಗ ಕ್ರೀಡಾಂಗಣದಲ್ಲಿ ಸಮಾರಂಭವನ್ನು ನಡೆಸಲು ತೀರ್ಮಾನಿಸಲಾಯಿತು. ನಗರದ ಸಿದ್ದಲಿಂಗಯ್ಯ ವೃತ್ತದ ಬಳಿಯಿಂದ ವಿವಿಧ ಕಲಾತಂಡಗಳೊಂದಿಗೆ ಶ್ರೀ ಭುವನೇಶ್ವರಿ ದೇವಿ ಅದ್ದೂರಿ ಮೆರವಣಿಗೆ ನಡೆಸಲು ತೀರ್ಮಾನಿಸಲಾಯಿತು. ಸಮಾರಂಭಕ್ಕೆ ತಗುವಲುವ ವೆಚ್ಚವನ್ನು ಭರಿಸಲು ಆರ್ಥಿಕ ಸಮಿತಿಯಿಂದ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ತಹಸೀಲ್ದಾರ್ ಬಿ.ಸಂಪತ್‌ಕುಮಾರ್ ತಿಳಿಸಿದರು.

ಸಮಿತಿಗಳಲ್ಲಿ ಸದಸ್ಯರನ್ನು ನೇಮಿಸುವ ಕುರಿತಾಗಿ ವಿವಿಧ ಸಂಘಟನೆಗಳ ಮುಖಂಡರ ಮಧ್ಯೆ ಒಮ್ಮತ ಮೂಡದೆ ಸಭೆಯಲ್ಲಿ ಕೆಲ ಕಾಲ ಗೊಂದಲವೇರ್ಪಟ್ಟಿತು. ಸಭೆಯಲ್ಲಿ ಭಾಗವಹಿಸಿದ್ದವರು ಸಮಿತಿಗೆ ಸದಸ್ಯರನ್ನು ಸೂಚಿಸಲು ಸ್ವತಂತ್ರರು. ಆದರೆ ಅದನ್ನು ಅಂತಿಮಗೊಳಿಸುವುದು ಸಮಿತಿ ಅಧ್ಯಕ್ಷರು ಹಾಗೂ ಮುಖ್ಯ ಅಧಿಕಾರಿಗಳ ಹೊಣೆಯಾಗಿದೆ. ಸಮಿತಿಯನ್ನು ಅಂತಿಮಗೊಳಿಸಿ, ಸಮಾರಂಭವನ್ನು ಸುಲಲಿತವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲಾ ಕನ್ನಡಪರ ಸಂಘಟನೆಗೆಳು ರಾಜಕೀಯ ಪಕ್ಷಗಳು ಹಾಗೂ ಎಲ್ಲಾ ನಾಗರಿಕರ ಸಹಕಾರ ಅಗತ್ಯವಾಗಿದೆ ಎಂದು ತಹಸೀಲ್ದಾರ್ ತಿಳಿಸಿದರು.

ಸಮಾರಂಭಕ್ಕೆ ಹಾಗೂ ಮೆರವಣಿಗೆಗೆ ಕನ್ನಡಪರ ಸಂಗಟನೆಗಳ ಕಾರ್ಯಕರ್ತರು ಮುಖಂಡರು ಬೆಂಬಲಿಸಿ ಕನ್ನಡ ರಾಜ್ಯೋತ್ಸವವನ್ನು ರಾಷ್ಟ್ರೀಯ ಹಬ್ಬಗಳ ಅಚರಣೆಯಂತೆ ಅಚರಿಸಲು ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಯಿತು.

ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಅಚರಿಸಲು  ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ರಾಜೇಂದ್ರ ಅವರಿಗೆ ಸೂಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.