ADVERTISEMENT

ಅವ್ಯವಹಾರ; ಯುವ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2012, 19:30 IST
Last Updated 24 ಜನವರಿ 2012, 19:30 IST

ಚಿತ್ರದುರ್ಗ: ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿರುವ ಅವ್ಯವಹಾರ ಖಂಡಿಸಿ ಚಿತ್ರದುರ್ಗ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
 
ನಗರದ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ದುರಾಸೆಯಿಂದ ನ್ಯಾಯಬೆಲೆ ಅಂಗಡಿ ಗಳ ವಿತರಕರು ಸಾರ್ವ ಜನಿಕರಿಗೆ ಅನ್ಯಾಯ ಮಾಡು ತ್ತಿದ್ದಾರೆ. ಸರ್ಕಾರ ನಿಗದಿ ಪಡಿಸಿದ ಪ್ರಮಾಣದಲ್ಲಿ ಪಡಿತರ ಚೀಟಿ ದಾರರಿಗೆ ಆಹಾರ ಪದಾರ್ಥಗಳು ಸೇರಿದಂತೆ ಇತರೆ ವಸ್ತುಗಳನ್ನು ವಿತರಿಸುತ್ತಿಲ್ಲ. ನ್ಯಾಯ ಬೆಲೆ ಅಂಗಡಿಗಳ ವಿತರಕರು ಯಾರ ಭಯವಿಲ್ಲದೆ ಅವ್ಯವಹಾರ ನಡೆಸುತ್ತಿ ದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಪಡಿತರ ಚೀಟಿಗಳಿಗೆ ಅನುಗುಣವಾಗಿ ಆಯಾ ಫಲಾನುಭವಿಗಳಿಗೆ ಆಹಾರ ಧಾನ್ಯ ವಿತರಿಸದೇ ಬ್ಲಾಕ್‌ನಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ. ಸೀಮೆಎಣ್ಣೆಯನ್ನು ಸರಿಯಾಗಿ ನೀಡುತ್ತಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಇಲ್ಲಸಲ್ಲದ ಕಾರಣ ಹೇಳುತ್ತಾ ಬ್ಲಾಕ್‌ನಲ್ಲಿ ಮಾರಿಕೊಳ್ಳುತ್ತಿದ್ದಾರೆ ಎಂದು ಕಾರ್ಯಕರ್ತರು ದೂರಿದರು.

ಅಡುಗೆ ಅನಿಲ ವಿತರಕರಾದ ಎಸ್‌ಎನ್‌ಆರ್, ಮಾರುತಿ, ಜಗಳೂರು ಮಹಾಲಿಂಗಪ್ಪ ಎಜೆನ್ಸಿ ಮಾಲೀಕರು ಸಾರ್ವಜನಿಕರಿಗೆ ವಂಚಿಸುತ್ತಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ನಗರಕ್ಕೆ ಪ್ರಮಾಣಿಕ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.  ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಖಾಲೀದ್ ಹುಸೇನ್, ಸೈಯದ್ ಮೊಹಿದ್ದೀನ್, ರಮೇಶ್, ಕೆಂಚಣ್ಣ, ಇಂತಿಯಾಜ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.