ಚನ್ನರಾಯಪಟ್ಟಣ: `ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಸತ್ಯ ಮತ್ತು ಅಹಿಂಸೆ ಅಸ್ತ್ರದ ಮೂಲಕ ಸಮಾಜದಲ್ಲಿ ಪರಿವರ್ತನೆ ಸಾಧ್ಯ~ ಎಂದು ಆದಿಚುಂಚನಗಿರಿ ಮಠದ ಕಾರ್ಯದರ್ಶಿ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು, ಹಿರಿಯ ವಿದ್ಯಾರ್ಥಿಗಳ ಸಂಘ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿ ಅವರ ವಿಚಾರ ಧಾರೆ ಮತ್ತು ಉಪನ್ಯಾಸ ಮಾಲಿಕೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
`ಭಾರತದಲ್ಲಿ ಶೇ.60 ರಷ್ಟು ಯುವಶಕ್ತಿ ಇದೆ. ಸೋಮಾರಿತನ ನಿವಾರಿಸಿ ಮೈಕೊಡವಿ ನಿಂತರೆ ಪ್ರಬುದ್ಧ ಭಾರತ ನಿರ್ಮಿಸಬಹುದು. ಪ್ರತಿಯೊಬ್ಬರೂ ತಮ್ಮನ್ನು ತಾವು ಅರಿತಾಗ ಮಾತ್ರ ವ್ಯಕ್ತಿತ್ವ ವಿಕಾಸವಾಗುತ್ತದೆ, ಮನುಷ್ಯನ ಅಂತಃಕರಣ ಶುದ್ಧಿಯಾಗುತ್ತದೆ~ ಎಂದರು.
ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ. ಹೊ.ಶ್ರೀನಿವಾಸಯ್ಯ, `ಮನೋಸ್ಥೈರ್ಯದ ಕೊರತೆಯಿಂದ ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ~ ಎಂದರು.
ಸಂಸ್ಥೆಯ ಕಾರ್ಯದರ್ಶಿ ಎಚ್.ಎಸ್. ವಿಜಯಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಗಾಂಧೀಜಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ವುಡೇ ಪಿ.ಕೃಷ್ಣ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಎಚ್.ಬಿ.ದಿನೇಶ್, ಕಾಲೇಜು ಪ್ರಾಚಾರ್ಯ ಪ್ರೊ.ಎನ್.ಸೋಮಸುಂದರ, ಗಾಂಧಿ ಸ್ಮಾರಕ ನಿಧಿ ಜಂಟಿ ಕಾರ್ಯದರ್ಶಿ ಪ್ರೊ.ಜಿ.ಬಿ.ಶಿವರಾಜು, ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಮಾತನಾಡಿದರು. ಆದಿಚುಂಚನಗಿರಿ ಶಾಖಾ ಮಾಠಾಧೀಶ ಶಂಭುನಾಥ ಸ್ವಾಮೀಜಿ, ಮಾಜಿ ಶಾಸಕ ಡಾ.ಎನ್.ಬಿ.ನಂಜಪ್ಪ, ಮತ್ತಿತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.