ಕೊಪ್ಪಳ: ನಗರದಲ್ಲಿ ಬಸವೇಶ್ವರ, ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ರಾಂ ಅವರ ಪುತ್ಥಳಿಗಳನ್ನು ಪ್ರತಿಷ್ಠಾಪನೆ ಮಾಡುವಲ್ಲಿ ಜಿಲ್ಲಾಡಳಿತ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ದೂರಿ ಬಸವೇಶ್ವರ, ಡಾ.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ರಾಂ ಮೂರ್ತಿ ಪ್ರತಿಷ್ಠಾಪನಾ ಹೋರಾಟ ಸಮಿತಿ ಸದಸ್ಯರು ಸೋಮವಾರ ಇಲ್ಲಿನ ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು.
ಸಾಹಿತ್ಯ ಭವನದಿಂದ ನಗರಸಭೆ ವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಸಮಿತಿ ಸದಸ್ಯರು, ಪುತ್ಥಳಿಗಳನ್ನು ಪ್ರತಿಷ್ಠಾಪಿಸಲು ಜಿಲ್ಲಾಡಳಿತ ಹಾಗೂ ನಗರಸಭೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಐದು ವರ್ಷಗಳಿಂದ ಇದೇ ಬೇಡಿಕೆಯನ್ನು ಮುಂದಿಟ್ಟುಕೊಂಡು ದಲಿತ ಮತ್ತು ವಿವಿಧ ಪ್ರಗತಿಪರ ಸಂಘಟನೆಗಳು ಜಿಲ್ಲೆಯಲ್ಲಿ ಹೋರಾಟವನ್ನು ನಡೆಸುತ್ತಾ ಬಂದಿವೆ. ಆದರೆ, ಇದ್ಯಾವುದಕ್ಕೂ ಗಮನ ನೀಡದ ಜಿಲ್ಲಾಡಳಿತ ಮತ್ತು ನಗರಸಭೆ ಜಾಣ ಕುರುಡುತನ ಪ್ರದರ್ಶಿಸುತ್ತಲೇ ಬಂದಿವೆ ಎಂದು ಸಮಿತಿ ಗೌರವಾಧ್ಯಕ್ಷ ಭರಮಪ್ಪ ಬೆಲ್ಲದ ದೂರಿದರು.
ಬರುವ ಏಪ್ರಿಲ್ 5ರ ಒಳಗಾಗಿ ಈ ಮೂವರು ಮಹನೀಯರ ಪುತ್ಥಳಿಗಳನ್ನು ನಗರದಲ್ಲಿ ಪ್ರತಿಷ್ಠಾಪಿಸಲು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಉಗ್ರ ಸ್ವರೂಪದ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.
ಮನವಿಪತ್ರ ಸ್ವೀಕರಿಸಿ ಮಾತನಾಡಿದ ಪೌರಾಯುಕ್ತೆ ಬಿ.ಎಂ. ಅಶ್ವಿನಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸಮಿತಿ ಅಧ್ಯಕ್ಷರಾದ ಡಾ.ಜ್ಞಾನಸುಂದರ, ಮುಖಂಡರಾದ ಶಿವಕುಮಾರ ಕುಕನೂರು, ಚೆನ್ನಬಸಪ್ಪ, ಹಾಲೇಶ ಕಂದಾರಿ, ಗವಿಸಿದ್ಧಪ್ಪ ಗಿಣಿಗೇರಿ, ಹನುಮಂತ ಮತ್ತಿತರರು ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.