ಚಿಕ್ಕಬಳ್ಳಾಪುರ: ಮಹಿಳೆಯರು ಆರ್ಥಿಕ ಸಬಲೀಕರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ರೂಪಿಸಿವೆ. ಅವುಗಳ ಪರಿಣಾಮಕಾರಿ ಜಾರಿ ಮತ್ತು ಸದ್ಬಳಕೆ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಮಂಜುಳಾ ಶುಕ್ರವಾರ ಇಲ್ಲಿ ತಿಳಿಸಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಕೈಗಾರಿಕಾ ವಿಚಾರ ಸಂಕಿರಣ ಮತ್ತು ಗೃಹೋಪಯೋಗಿ ರಾಸಾಯನಿಕ ಉತ್ಪನ್ನಗಳ ತರಬೇತಿ ಶಿಬಿರ ಉದ್ಘಾಟಿಸಿ, `ಯೋಜನೆ ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಬೇಕು~ ಎಂದು ಹೇಳಿದರು.
`ಜಿಲ್ಲೆಯಲ್ಲಿ ಸುಮಾರು 300 ಸಣ್ಣ, ಅತಿ ಸಣ್ಣ, ಗೃಹೋಪಯೋಗಿ ವಸ್ತುಗಳ ಉತ್ಪನ್ನಗಳ ಅಭಿವೃದ್ಧಿಗೆ ಮಹಿಳೆಯರು ಮುಂದಾಗಬೇಕು. ಮಹಿಳೆಯರ ಕಲ್ಯಾಣಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ. ಕೈಗಾರಿಕೆಗಳ ಅಭಿವೃದ್ಧಿ ಮತ್ತು ಮಹಿಳೆಯರ ಕಲ್ಯಾಣಕ್ಕಾಗಿ ಗೌರಿಬಿದನೂರಿನಲ್ಲಿ ಮತ್ತು ಚಿಂತಾಮಣಿಯಲ್ಲಿ ಈಗಾಗಲೇ ಸ್ಥಳಗಳನ್ನು ಗುರುತಿಸಲಾಗಿದೆ~ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಬಿ.ಎಸ್.ಶೇಖರಪ್ಪ ಮಾತನಾಡಿ, `ಮಹಿಳೆಯರು ಹೆಚ್ಚು ಆಸಕ್ತಿ ವಹಿಸಿ, ಸಣ್ಣ ಉದ್ಯಮ ಸ್ಥಾಪನೆಗೆ ಮುಂದಾಗಬೇಕು. ಜಿಲ್ಲಾಡಳಿತ ಮತ್ತು ಕೈಗಾರಿಕೆ ಇಲಾಖೆಯಿಂದ ನಡೆಯುವ ವಿಶೇಷ ತರಬೇತಿಗಳನ್ನು ಮಹಿಳೆಯರು ಸದುಪಯೋಗಿಸಿಕೊಳ್ಳಬೇಕು ಎಂದರು.
ಶಾಸಕ ಕೆ.ಪಿ.ಬಚ್ಚೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯೆ ಭರಣಿ ವೆಂಕಟೇಶ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ವಿ.ಟಿ.ವೆಂಕಟೇಶ್, ಉಪನಿರ್ದೇಶಕ ಜಯಕುಮಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಸ್.ಸುಂದರೇಶ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.