ADVERTISEMENT

ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಆರೋಗ್ಯ ರಕ್ಷಾ ಸಮಿತಿ ಮನವಿ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2011, 5:30 IST
Last Updated 7 ಫೆಬ್ರುವರಿ 2011, 5:30 IST

ಹೊಳಲ್ಕೆರೆ: ಪಟ್ಟಣದ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಗಳ ಗೂಡಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ರಕ್ಷಾ ಸಮಿತಿಯ ಸದಸ್ಯ ಎಸ್. ತಿಪ್ಪೇಸ್ವಾಮಿ ಆಗ್ರಹಿಸಿದರು.

ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ನಿರ್ವಾಣಪ್ಪ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವೆಂಕಟ ಶಿವಾರೆಡ್ಡಿ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದರು.

ಇಲ್ಲಿನ ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳಿಲ್ಲ. ಚುಚ್ಚುಮದ್ದು ನೀಡುವ ಸೂಜಿ, ಸಿರಿಂಜ್, ಡ್ರಿಪ್ ಸಾಮಗ್ರಿ, ಆ್ಯಂಟಿಬಯೋಟಿಕ್ ಮಾತ್ರೆಗಳ ದಾಸ್ತಾನಿಲ್ಲ. ರೋಗಿಗಳನ್ನು ಖಾಸಗಿ ಔಷಧಿ ಅಂಗಡಿಗಳಿಗೆ ಕಳುಹಿಸುತ್ತಾರೆ. ಆಸ್ಪತ್ರೆಯ ಆವರಣದಲ್ಲಿ ಎರಡು ಕೊಳವೆಬಾವಿಗಳಿದ್ದರೂ, ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡುತ್ತಿಲ್ಲ.

ಆಸ್ಪತ್ರೆಯಲ್ಲಿರುವ ನೀರಿನ ಫಿಲ್ಟರ್ ಕೆಲಸ ಮಾಡುತ್ತಿಲ್ಲ. ರಾತ್ರಿ ವೇಳೆ ವಿದ್ಯುತ್ ಕಡಿತಗೊಂಡಾಗ ಜನರೇಟರ್ ವ್ಯವಸ್ಥೆ ಇಲ್ಲದೇ ರೋಗಿಗಳು ಪರದಾಡುವಂತಾಗಿದೆ ಎಂದು ಅವರು ದೂರಿದರು.ಸಮರ್ಪಕ ಔಷಧಿ ವಿತರಣೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ವೆಂಕಟಶಿವಾರೆಡ್ಡಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.