ಸುರತ್ಕಲ್: ಪಣಂಬೂರಿನಲ್ಲಿ ಕಾರ್ಮಿಕರಿಗಾಗಿ ಇರುವ ಇಎಸ್ಐ ಆಸ್ಪತ್ರೆಗೆ ಅತ್ಯಗತ್ಯವಾದ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಕಾರ್ಮಿಕ ಸಂಘದಿಂದ ಮಂಗಳವಾರ ಆಸ್ಪತ್ರೆ ಮುಂಭಾಗ ಪ್ರತಿಭಟನಾ ಧರಣಿ ನಡೆಯಿತು.
ಬೈಕಂಪಾಡಿ ಕೈಗಾರಿಕಾ ಪ್ರದೇಶ, ಪಣಂಬೂರಿನಲ್ಲಿ 20 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಈ ಯೋಜನೆ ಫಲಾನುಭವಿಗಳಾಗಿದ್ದಾರೆ. ಆದರೆ ಅಪಘಾತವಾದಲ್ಲಿ ತುರ್ತು ಚಿಕಿತ್ಸೆ ನೀಡಲು ಈ ಆಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆಯೇ ಇಲ್ಲ. ಆಂಬುಲೆನ್ಸ್ ಸೇವೆಯಿಲ್ಲ, ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇದೆ. ರೋಗಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂದು ಪ್ರತಿಭಟನಾನಿರತರು ದೂರಿದರು.
ಕಾರ್ಮಿಕರ ಹಿತಾಸಕ್ತಿ ಕಾಪಾಡಬೇಕಿದ್ದ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ, ಚಿಕಿತ್ಸೆಗೆಂದು ಬಂದಲ್ಲಿ ನಿರಾಶೆಯಾಗುತ್ತದೆ. ಆಸ್ಪತ್ರೆ ಸಿಬ್ಬಂದಿ ಮಾಡಬೇಕಾದ ಕೆಲಸಗಳನ್ನು ವೈದ್ಯಕೀಯ ನೆರವಿಗೆ ಬರುವ ಕಾರ್ಮಿಕರೇ ನೆರವೇರಿಸಬೇಕಾದ ಪರಿಸ್ಥಿತಿಯಿದೆ ಎಂದು ಧರಣಿ ನಿರತರು ಗಮನ ಸೆಳೆದರು.
ಸಂಘದ ಪ್ರತಿಭಟನೆ ಹಿನ್ನೆಲೆಯಲ್ಲಿ ಇಎಸ್ಐ ಆಸ್ಪತ್ರೆ ಹಿರಿಯ ಅಧೀಕ್ಷಕ ಡಾ. ಗೋಪಾಲಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು. ಬಹುತೇಕ ಬೇಡಿಕೆಗಳು ಶೀಘ್ರವೇ ನೆರವೇರಲಿವೆ. ವೈದ್ಯರ ಹಾಗೂ ಸಿಬಂದಿ ಕೊರತೆಯನ್ನೂ ನೀಗಿಸಲಾಗುವುದು ಎಂದು ಅವರು ಆಶ್ವಾಸನೆ ನೀಡಿದರು.
ಸಂಘದ ಜಿಲ್ಲಾ ಅಧ್ಯಕ್ಷ ಸಂತೋಷ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೀವ್ ಕುಲಾಲ್, ಜಲಂಧರ್ ಶೆಟ್ಟಿ, ರಾಜೇಶ್, ನಾಗೇಶ್ ಬಂಟ್ವಾಳ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು. ಅನಿರ್ದಿಷ್ಟಾವಧಿಗೆ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ, ಬೇಡಿಕೆ ಈಡೇರಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ಮಂಗಳವಾರವೇ ಮುಕ್ತಾಯಗೊಂಡಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.