ADVERTISEMENT

ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2011, 19:30 IST
Last Updated 9 ಆಗಸ್ಟ್ 2011, 19:30 IST
ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ
ಉಪನ್ಯಾಸಕರ ನೇಮಕಕ್ಕೆ ಒತ್ತಾಯಿಸಿ ಪ್ರತಿಭಟನೆ   

ಅರಸೀಕೆರೆ: ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ  ನಿವಾರಣೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

`ಕಾಲೇಜು ಆರಂಭವಾಗಿ ತಿಂಗಳು ಕಳೆದಿದ್ದರೂ ಉಪನ್ಯಾಸಕರ ನೇಮಕವಾಗಿಲ್ಲ. ಈವರೆಗೆ ನಡೆಯುತ್ತಿದ್ದ ಬಿಬಿಎಂ ತರಗತಿ ಮುಚ್ಚಲಾಗಿದೆ.  ಶಿಕ್ಷಕರೊಳಗೆ ಭಿನ್ನಾಭಿಪ್ರಾಯ ಇರುವುದರಿಂದ ಕಾಲೇಜು ಸಮಸ್ಯೆಗಳ ಆಗರವಾಗಿದೆ ಎಂದು ಆರೋಪಿಸಿದರು.

ಉಪನ್ಯಾಸಕರ ಸಮಸ್ಯೆ ಬಗ್ಗೆ ಚರ್ಚಿಸಲು ಹೋದರೆ ಪ್ರಾಂಶುಪಾಲರು ಲಭ್ಯವಾಗುವುದಿಲ್ಲ. ವಿದ್ಯಾರ್ಥಿಗಳು ಬಂದು ಗಲಾಟೆ ಮಾಡುತ್ತಾರೆ ಎಂಬ ಕಾರಣಕ್ಕೆ ಅವರು ಪ್ರತಿದಿನ ತಮ್ಮ ಕೊಠಡಿ ಬದಲಿಸುತ್ತಾರೆ.

ಕಾಲೇಜಿನ ಕ್ರೀಡಾ ಚಟುವಟಿಕೆಯಲ್ಲಾಗಲಿ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಾಗಲಿ ಆಡಳಿತ ಮಂಡಳಿ ಆಸಕ್ತಿ ವಹಿಸುತ್ತಿಲ್ಲ. ಸಮಸ್ಯೆಗಳ ಬಗ್ಗೆ ದನಿ ಎತ್ತಿದ ವಿದ್ಯಾರ್ಥಿಗಳಿಗೆ ಆಂತರಿಕ ಪರೀಕ್ಷೆಗಳಲ್ಲಿ ಕಡಿಮೆ ಅಂಕ ನೀಡುವಂತೆ ಪ್ರಾಂಶುಪಾಲರು ಉಪನ್ಯಾಸಕರಿಗೆ ಸೂಚಿಸಿದ್ದಾರೆ~ ವಿದ್ಯಾರ್ಥಿಗಳು ದೂರಿದರು.

ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಸುದ್ದಿ ಅರಿತ ಮಾಜಿ ಶಾಸಕ ಎ.ಎಸ್. ಬಸವರಾಜು ಕೂಡಲೇ ಕಾಲೇಜಿಗೆ ಭೇಟಿ ನೀಡಿ ಪ್ರಾಚಾರ್ಯೆ ದಾನಮ್ಮ ಅವರ ಜತೆ ಚರ್ಚಿಸಿದರು. ಬಳಿಕ ಮಾತನಾಡಿ `ಇನ್ನೊಂದು ವಾರದೊಳಗೆ ಉನ್ನತ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಕಾಲೇಜಿನ ಸಮಸ್ಯೆಗಳನ್ನು ಬಗೆ ಹರಿಸುತ್ತೇನೆ~ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.