ಕಾರವಾರ: ತಾಲ್ಲೂಕಿನ ಕದ್ರಾ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದೆ. ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ನೀರಿನ ಮಟ್ಟ ಏರುತ್ತಿದೆ ಎಂದು ಕರ್ನಾಟಕ ವಿದ್ಯುತ್ ನಿಗಮದ ಕದ್ರಾದ ಕಾರ್ಯ ನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ಜಲಾಶಯದ ಗರಿಷ್ಠ ಮಟ್ಟ 34.50 ಮೀಟರ್ಗಳಾಗಿದ್ದು ಗುರುವಾರ ನೀರಿನ ಮಟ್ಟ 30.05 ಮೀಟರ್ ಇತ್ತು. ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರಿದಲ್ಲಿ ಕದ್ರಾ ಜಲಾಶಯ ಗರಿಷ್ಠ ಮಟ್ಟವನ್ನು ಶೀಘ್ರವೇ ತಲುಪುವ ಸಾಧ್ಯತೆ ಇದೆ. ಅಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿಯಾದ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುವುದು.
ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ದಂಡೆಯ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕು. ಅಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲದ ಅವಧಿಯಲ್ಲಿ ನಡೆಸದಂತೆ ಎಚ್ಚರಿಸಲಾಗಿದೆ.
ಗುರುವಾರ ಬೆಳಿಗ್ಗೆ 8.30ಕ್ಕೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ 64.1 ಮಿ.ಮೀ. ಮಳೆಯಾಗಿದೆ. ಅಂಕೋಲಾ 5, ಹೊನ್ನಾವರ 6.6, ಕಾರವಾರ 2.1, ಸಿದ್ದಾಪುರ 8, ಶಿರಸಿ 14, ಜೋಯಿಡಾ 4 ಮತ್ತು ಯಲ್ಲಾಪುರ 19 ಮಿ.ಮೀ. ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.