ಅಥಣಿ: `ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಖಿಳೆಗಾಂವ ಬಸವೇಶ್ವರ ಏತ ನೀರಾವರಿ ಯೋಜನೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿ, 600 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಘೋಷಿಸಿದರು.
ತಾಲ್ಲೂಕಿನ ಕಟಗೇರಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ಭಾನುವಾರ ಹಿಪ್ಪರಗಿ ನೀರಾವರಿ ಯೋಜನೆಯ ಹಲ್ಯಾಳ, ಕರಿಮಸೂತಿ ಏತ ನೀರಾವರಿ ಯೋಜನೆಯನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. `ತಾಲ್ಲೂಕಿನ ಉತ್ತರ ಗಡಿ ಭಾಗದ 22 ಗ್ರಾಮಗಳ ಸುಮಾರು 70,000 ಎಕರೆ ಭೂಮಿಗೆ ನೀರಾವರಿ ಸೌಕರ್ಯ ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ ಜನವರಿಯಲ್ಲಿ ಚಾಲನೆ ನೀಡಲಾಗುವುದು~ ಎಂದರು.
ಕೃಷಿ ಕಾಲೇಜಿಗೆ ಒಪ್ಪಿಗೆ: ಅಥಣಿ ಶಾಸಕ ಲಕ್ಷ್ಮಣ ಸವದಿ ಮನವಿಗೆ ಸ್ಪಂದಿಸಿದ ಶೆಟ್ಟರ್, `ಅಥಣಿಯಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಒಪ್ಪಿಗೆ ನೀಡಲಾಗುವುದು. ಕೃಷಿ ಇಲಾಖೆಯಿಂದ ಈ ಕುರಿತು ಪ್ರಸ್ತಾವ ಬಂದ ತಕ್ಷಣವೇ ಮಂಜೂರಾತಿ ನೀಡಲಾಗುವುದು.
`ನವೆಂಬರ್- ಡಿಸೆಂಬರ್ನಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲಾಗುವುದು. ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಆಗಿರುವ ಅಭಿವೃದ್ಧಿಯನ್ನು ನೋಡಿ ಪಕ್ಕದ ಮಹಾರಾಷ್ಟ್ರದ ಅನೇಕ ಹಳ್ಳಿಗಳು ರಾಜ್ಯಕ್ಕೆ ಸೇರ್ಪಡೆಯಾಗಲು ನಿರ್ಣಯ ಅಂಗೀಕರಿಸಿವೆ~ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.