ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ರಾಜ್ಯಕ್ಕೆ ಕಲ್ಲಿದ್ದಲು ನೀಡುವಲ್ಲಿ ಮಲತಾಯಿ ನೀತಿ ದೋರಣೆ ಅನುಸರಿಸುವ ಮೂಲಕ ರಾಜ್ಯದ ಜನರನ್ನು ಕತ್ತಲಿನ ಕಡೆ ದೂಡುತ್ತಿದ್ದಾರೆ ಎಂದು ರಾಜ್ಯ ರೇಷ್ಮೆ ಮಾರಾಟ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಆರೋಪಿಸಿದರು.
ರಾಜ್ಯಕ್ಕೆ ಕಲ್ಲಿದ್ದಲು ನೀಡುವಲ್ಲಿ ಕೇಂದ್ರ ಸರ್ಕಾರದ ಮಲತಾಯಿ ದೋರಣೆ ನೀತಿಯನ್ನು ಖಂಡಿಸಿ ಮಂಗಳವಾರ ತಾಲ್ಲೂಕು ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಬಿಜೆಪಿ ಸರ್ಕಾರ ಆಡಳಿತ ಇರುವ ರಾಜ್ಯಗಳಿಗೆ ನ್ಯಾಯಯುತವಾಗಿ ದೊರೆಯುವ ಸೌಲಭ್ಯಗಳನ್ನು ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವ ಕೇಂದ್ರದ ಯುಪಿಎ ಸರ್ಕಾರ ಆಂಧ್ರಪ್ರದೇಶ, ಕೇರಳ, ತಮಿಳುನಾಡು ರಾಜ್ಯಗಳಿಗೆ ಎಲ್ಲಾ ರೀತಿಯ ನೆರವು ನೀಡುತ್ತಿದೆ. ಆದರೆ ರಾಜ್ಯಕ್ಕೆ ದೊರೆಯಬೇಕಿರುವ ಕಲ್ಲಿದ್ದಲು ನೀಡಲು ಮಾತ್ರ ತೆಲಂಗಾಣ ಹೋರಾಟದ ಹಿನ್ನೆಲೆಯಲ್ಲಿ ರೈಲುಗಳ ಸಂಚಾರ ರದ್ದಾಗಿದೆ ಎಂದು ಕುಂಟು ನೆಪ ಹೇಳುತ್ತಿದೆ. ಈ ಮೂಲಕ ರಾಜ್ಯವನ್ನು ಕತ್ತಲಿನಲ್ಲಿ ಮುಳುಗುವಂತೆ ಮಾಡಲಾಗಿದೆ.
ಕೇಂದ್ರ ಸರ್ಕಾರ ಇನ್ನು ಮುಂದಾದರೂ ರಾಜ್ಯಕ್ಕೆ ಕಲ್ಲಿದ್ದಲು ಸೇರಿದಂತೆ ಎಲ್ಲಾ ಸೌಲತ್ತುಗಳನ್ನು ಕೂಡಲೇ ನೀಡಬೇಕು ಇಲ್ಲವಾದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ಎಸ್.ಅಶ್ವತ್ಥ್ನಾರಾಯಣಕುಮಾರ್, ಉಪಾಧ್ಯಕ್ಷೆ ಸುಮಾಮಂಜುನಾಥ್,ನಗರ ಬಿಜೆಪಿ ಅಧ್ಯಕ್ಷ ಗೋಪಿ, ಬೆಂ.ಹಾ.ಒ.ನಿರ್ದೇಶಕಿ ಪುಷ್ಪಾಶಿವಶಂಕರ್, ಟಿಎಪಿಎಂಸಿಎಸ್ ಅಧ್ಯಕ್ಷ ಎಸ್.ದಯಾನಂದ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಬಿ.ಎಂ.ನಾರಾಯಣಸ್ವಾಮಿ, ಜಿ.ಪ್ರಧಾನ ಕಾರ್ಯದರ್ಶಿ ನಾಗೇಶ್, ಜಿ.ಸಂಘಟನಾ ಕಾರ್ಯದರ್ಶಿ ಕಾಂತರಾಜು, ಜಿಲ್ಲಾ ಕಿಸಾನ್ ಮೋರ್ಚಾ ಅಧ್ಯಕ್ಷ ನಾಗರಾಜ್, ನೆಲಮಂಗಲ ತಾ.ಬಿಜೆಪಿ ಕಾರ್ಯದರ್ಶಿ ಗುಬ್ಬಣ್ಣಸ್ವಾಮಿ, ಎಸ್.ರಾಜಲಕ್ಷ್ಮೀ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ವತ್ಸಲಾ, ನಗರ ಪ್ರಧಾನ ಕಾರ್ಯದರ್ಶಿ ದೇವಕಿ, ಬಿಜೆಪಿ ಮಹಿಳಾ ಘಟಕದ ನಗರ ಅಧ್ಯಕ್ಷೆ ಉಮಾಮೇಹೇಶ್ವರಿ ಮುಂತಾದವರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.