ಬೆಂಗಳೂರು: ಕಳುವಾಗಿದ್ದ ಬೈಕ್ನ್ನು ಮಾಲೀಕರಿಗೆ ವಾಪಸು ನೀಡಲು ನಗರದ ಪೊಲೀಸರೊಬ್ಬರು ₹ 5,000 ಲಂಚ ಪಡೆದಿದ್ದಾರೆ ಎನ್ನಲಾಗಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪಶ್ಚಿಮ ವಿಭಾಗ ವ್ಯಾಪ್ತಿಯ ಠಾಣೆಗೆ ಸೇರಿದ ಪೊಲೀಸ್, ಹಣ ಪಡೆದು ಜೇಬಿಗೆ ಹಾಕಿಕೊಳ್ಳುವ ದೃಶ್ಯ ವಿಡಿಯೊದಲ್ಲಿದೆ.
ಆ ವಿಡಿಯೊವನ್ನು ಗಗನ್ ಬಪ್ಪಿ ಎಂಬುವರು, ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ಅವರ ಟ್ವಿಟರ್ ಖಾತೆಗೆ ಟ್ಯಾಗ್ ಮಾಡಿದ್ದಾರೆ. ‘ಕಳುವಾಗಿದ್ದ ನನ್ನ ಸಹೋದರನ ಬೈಕ್ ಅನ್ನು ಪತ್ತೆ ಮಾಡಿದ್ದ ಪೊಲೀಸರು, ಅದನ್ನು ವಾಪಸು ನೀಡಲು ₹5,000 ಲಂಚ ಪಡೆದಿದ್ದಾರೆ. ಈ ಬಗ್ಗೆ ಏನು ಹೇಳುತ್ತೀರಾ’ ಎಂದು ಗಗನ್ ಪ್ರಶ್ನಿಸಿದ್ದಾರೆ.
ಅದಕ್ಕೆ ಪ್ರತಿಕ್ರಿಯಿಸಿರುವ ಸಾರ್ವಜನಿಕರು, ‘ಹಲವು ಠಾಣೆಗಳಲ್ಲಿ ಇದೇ ಸ್ಥಿತಿ ಇದೆ. ಕೆಲವರ ವರ್ತನೆಯಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಹಣ ಪಡೆದ ಪೊಲೀಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ’ ಎಂದು ಒತ್ತಾಯಿಸಿದ್ದಾರೆ.
ಇದಕ್ಕೆ ಕಮಿಷನರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.