ADVERTISEMENT

ಕಾರ್ಯಕರ್ತರ ಮೇಲೆ ಹಲ್ಲೆ: ವಿಷ ಸೇವಿಸಿದ ಶಾಸಕ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2014, 10:25 IST
Last Updated 5 ಮಾರ್ಚ್ 2014, 10:25 IST

ಬಳ್ಳಾರಿ: ತಮ್ಮ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಆಂಧ್ರದ ರಾಯದುರ್ಗ ಕ್ಷೇತ್ರದ ವೈಎಸ್‌ಆರ್‌ ಕಾಂಗ್ರೆಸ್‌ ಶಾಸಕ ಕಾಪು ರಾಮಚಂದ್ರರೆಡ್ಡಿ ಮಂಗಳವಾರ ವಿಷ ಸೇವಿಸಿ ಅಸ್ವಸ್ಥರಾಗಿದ್ದಾರೆ.

ರಾಯದುರ್ಗದಲ್ಲಿ ಮಧ್ಯಾಹ್ನ ವಿಷ ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ನಗರದ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ವಿಮ್ಸ್‌) ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇರಿಸ ಚಿಕಿತ್ಸೆ ನೀಡಿ, ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಘಟನೆಯ ಹಿನ್ನೆಲೆ: ರಾಯದುರ್ಗ ಪೊಲೀಸ್ ಠಾಣೆಯ ಅಧಿಕಾರಿ ಭಾಸ್ಕರ್ ರೆಡ್ಡಿ ಅವರು ಪಕ್ಷದ ಕಾರ್ಯಕರ್ತರನ್ನು ಸೋಮವಾರ ಕರೆಯಿಸಿ ಮುಂಬರುವ ಸ್ಥಳೀಯ ಸಂಸ್ಥೆ  ಚುನಾವಣೆ ವೇಳೆ ಗಲಾಟೆ ಮಾಡದಿರುವಂತೆ ಎಚ್ಚರಿಕೆ ನೀಡಿ, ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಲು ಬಳ್ಳಾರಿಯಿಂದ ತೆರಳಿದ್ದ ಶಾಸಕ ರಾಮಚಂದ್ರ ರೆಡ್ಡಿ, ಮಧ್ಯಾಹ್ನ ಪೊಲೀಸ್ ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ. ಈ ಸಂದರ್ಭ ಮಾತಿನ ಚಕಮಕಿ ನಡೆದ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಇಳಿದ ಅವರು ವಿಷ  ಕುಡಿದು ಅಸ್ವಸ್ಥರಾಗಿದ್ದರು.

ಇದೇ 30ರಂದು ರಾಯದುರ್ಗ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆಯಲಿದ್ದು, ಏಪ್ರಿಲ್ 2 ರಂದು ಮತ ಎಣಿಕೆ ನಡೆಯಲಿದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಹತ್ತಿಕ್ಕಲು ಕಾಂಗ್ರೆಸ್ ಮತ್ತು ತೆಲುಗು ದೇಶಂ ಪಕ್ಷದ ಮುಖಂಡರು ಪೊಲೀಸರ ಮೂಲಕ ಕಾರ್ಯಕರ್ತರನ್ನು ಬೆದರಿಸಿ, ಹಲ್ಲೆ ನಡೆಸುತ್ತಿದ್ದಾರೆ ಎಂದು ಹಲ್ಲೆಗೊಳಗಾದ ಕಾರ್ಯಕರ್ತರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.