ಕೊಪ್ಪ: ರಾಜ್ಯ ಬಿಜೆಪಿ ಸರ್ಕಾರ ಹೇಳಿಕೊಳ್ಳುವಂತಹ ಯಾವುದೇ ಸಾಧನೆ ಮಾಡಿಲ್ಲ. ಕೇಂದ್ರ ಸರ್ಕಾರ ನೀಡಿದ ಅನುದಾನವನ್ನೂ ಜನಕಲ್ಯಾಣಕ್ಕೆ ಬಳಸುವ ಇಚ್ಛಾಶಕ್ತಿ ತೋರಿಲ್ಲ ಎಂದು ಟೀಕಿಸಿದ ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ, ಕ್ಷೇತ್ರದಲ್ಲಿ ಪರಿವರ್ತನೆ ಅಲೆ ಎದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದರು.
ಪಟ್ಟಣದ ಪುರಭವನದಲ್ಲಿ ಬುಧವಾರ ಶೃಂಗೇರಿ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರದಷ್ಟು ಆಡಳಿತ ದುರುಪಯೋಗ, ಭ್ರಷ್ಟಾಚಾರವನ್ನು ಹಿಂದಿನ ಯಾವ ಸರ್ಕಾರವೂ ನಡೆಸಿರಲಿಲ್ಲ ಎಂದರು.
ಹಿಂದಿನ ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರ ಬೆಂಗಳೂರಿನಲ್ಲಿ ಐ.ಟಿ- ಬಿ.ಟಿ. ಬೆಳವಣಿಗೆಗೆ ಕಾರಣವಾಯಿತು. ಅದರಿಂದ ಲಕ್ಷಾಂತರ ಯುವಕರಿಗೆ ಉದ್ಯೋಗ, ಕೋಟ್ಯಾಂತರ ರೂಪಾಯಿ ಆದಾಯ ಬರುವಂತಾಯಿತು ಎಂದರು.
ಕಾಂಗ್ರೆಸ್ ರಾಜ್ಯ ಘಟಕ ಉಪಾಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಈ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಎಂದು ಟೀಕಿಸಿದರು.
ಯುವ ಕಾಂಗ್ರೆಸ್ ರಾಜ್ಯ ಘಟಕ ಅಧ್ಯಕ್ಷ ರಿಜ್ವಾನ್ ಅರ್ಷದ್ ಮಾತನಾಡಿ, ಈ ಚುನಾವಣೆಯಲ್ಲಿ ಬಿಜೆಪಿಗೆ ಜನ ಸರಿಯಾದ ಪಾಠ ಕಲಿಸಲಿದ್ದಾರೆ ಎಂದರು.
ಕ್ಷೇತ್ರ ಸಮಿತಿ ಅಧ್ಯಕ್ಷ ಜಯಶೀಲ ಅಧ್ಯಕ್ಷತೆ ವಹಿಸಿದ್ದರು. ಚಿತ್ರ ನಟಿ ಉಮಾಶ್ರೀ, ಮುಖಂಡರಾದ ಬಿ.ಎಲ್. ಶಂಕರ್, ಡಿ.ಕೆ.ತಾರಾದೇವಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಉಮೇಶ್, ಟಿ.ಡಿ.ರಾಜೇಗೌಡ, ಎಚ್.ಜಿ.ವೆಂಕಟೇಶ್, ಬಾಳೆಮನೆ ನಟರಾಜ್, ಚನ್ನಕೇಶವ, ಬಿ.ಸಿ.ಗೀತಾ, ಸೌಭಾಗ್ಯ ಗೋಪಾಲನ್, ವೆಂಕಟೇಶ್ ಗೌಡ, ಬಿ.ಎ.ಶ್ರೀನಿವಾಸ್ ಮತ್ತಿತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.