ಬೆಳಗಾವಿ: `ಸಚಿವರ ಖಾತೆಗಳ ಮರು ಹಂಚಿಕೆ ಮಾಡುವುದು, ಬಿಡುವುದು ನನಗೆ ಬಿಟ್ಟ ವಿಚಾರವಾಗಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಇಷ್ಟಪಡುವುದಿಲ್ಲ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಇಲ್ಲಿನ ಸುವರ್ಣ ಸೌಧ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ಬಳಿಕ ಮಾಧ್ಯಮದವರ ಪಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, `ಎಲ್ಲ ಸಚಿವರು ಅವರಿಗೆ ನೀಡಿದ ಖಾತೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಸಚಿವ ಸಂಪುಟ ಪುನರ್ರಚನೆ ಮಾಡಲಾಗುತ್ತದೆ ಎಂದು ನೀವೇ (ಮಾಧ್ಯಮದವರು) ಮೊದಲು ಸುದ್ದಿ ಬರೆಯುತ್ತೀರಿ? ಆಮೇಲೆ ಬಂದು ನನ್ನನು ಕೇಳುತ್ತೀರಿ!~ ಎಂದು ಆಕ್ಷೇಪಿಸಿದರು. `ರಾಜ್ಯದಲ್ಲಿ ಆಡಳಿತ ಸುಗಮವಾಗಿ ನಡೆಯುತ್ತಿದೆ. ಇನ್ನುಳಿದ 10 ತಿಂಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುತ್ತೇವೆ. ಮುಂದಿನ ಬಾರಿಯೂ ನಾವೇ (ಬಿಜೆಪಿ) ಅಧಿಕಾರಕ್ಕೆ ಬರುತ್ತೇವೆ~ ಎಂದರು.
ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರ ನೇಮಕ ಮಾಡುವ ಕುರಿತು ಮಾತನಾಡಲು ನಿರಾಕರಿಸಿದ ಶೆಟ್ಟರ್, `ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ನನಗೆ ಯಾವುದೇ ಅಡೆತಡೆಗಳಿಲ್ಲ. ಆದರೆ, `ನಾನು ಸಿಎಂ, ನನ್ನ ಮೇಲೆ ಇನ್ನೊಬ್ಬರು `ಸೂಪರ್ ಸಿಎಂ~ ಇದ್ದಾರೆ~ ಎಂಬಂತೆ ಬಿಂಬಿಸಲಾಗುತ್ತಿದೆ. ರಾಜಕಾರಣದಲ್ಲಿ ಮುಖ್ಯಮಂತ್ರಿಗಳ ಮೇಲೆ ಸಹಜವಾಗಿ ಕೆಲವು ಒತ್ತಡಗಳು ಇದ್ದೇ ಇರುತ್ತದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, `ಆಗಸ್ಟ್ 9ರಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವರೊಂದಿಗೆ ಸಭೆ ನಡೆಸಿ ಸರ್ಕಾರಿ ವೈದ್ಯರ ಬೇಡಿಕೆಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳುತ್ತೇನೆ. ವೈದ್ಯರು ಯಾವುದೇ ಕಾರಣಕ್ಕೂ ಆರೋಗ್ಯ ಸೇವೆ ನೀಡುವುದನ್ನು ನಿಲ್ಲಿಸಬಾರದು~ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.