ADVERTISEMENT

ಗುಣಮಟ್ಟದ ಕಾಮಗಾರಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಮೇ 2012, 19:30 IST
Last Updated 27 ಮೇ 2012, 19:30 IST

ಚಿತ್ರದುರ್ಗ: ಸಾರ್ವಜನಿಕರಿಂದ ದೂರು ಬಾರದ ರೀತಿಯಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಜಿ.ಎಚ್. ತಿಪ್ಪಾರೆಡ್ಡಿ ಗುತ್ತಿಗೆದಾರರಿಗೆ ಸೂಚಿಸಿದರು.

ನಗರದ ದಾವಣಗೆರೆ ರಸ್ತೆಯ ಆದರ್ಶನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.

ರೂ. 10ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚುವರಿಯಾಗಿ ರೂ. 4 ಲಕ್ಷ ಬಿಡುಗಡೆ ಮಾಡಿಸಲಾಗುವುದು. ಸರ್ಕಾರದ ಮೂಲಕ ಕೈಗೊಳ್ಳುವ ಕಾಮಗಾರಿಗಳಲ್ಲಿ ಯಾವುದೇ ಲೋಪದೋಷವಾಗದ ರೀತಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಯಾವುದೇ ಪ್ರದೇಶದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಲ್ಲಿನ ನಿವಾಸಿಗಳು ಕಳಪೆ ಕಾಮಗಾರಿ ನಡೆಯದಂತೆ ಎಚ್ಚರವಹಿಸಿ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು. ಕಾಮಗಾರಿಗಳು ಪೂರ್ಣಗೊಂಡ ನಂತರ ಅವುಗಳು ಹಾನಿಯಾಗದಂತೆ ನೋಡಿಕೊಳ್ಳುವುದು ಸ್ಥಳೀಯರ ಜವಾಬ್ದಾರಿ ಎಂದರು. 

ಈ ಪ್ರದೇಶದಲ್ಲಿ ಉದ್ಯಾನವನ ನಿರ್ಮಾಣ ಮಾಡುವಂತೆ ನಿವಾಸಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯುವ ಸಭೆಯಲ್ಲಿ ಪ್ರಸ್ತಾಪಿಸಿ, ಉದ್ಯಾನ ನಿರ್ಮಾಣಕ್ಕೆ ರೂ.12 ಲಕ್ಷ ಅನುದಾನ ಬಿಡುಗಡೆ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

ಸ್ಥಳೀಯರು ಆದರ್ಶ ನಗರ ಸಹಕಾರ ಸಂಘ ಸ್ಥಾಪಿಸಿಕೊಂಡು ಬಡಾವಣೆಯ ಅಭಿವೃದ್ಧಿಗೆ ಒತ್ತು ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ಗಿಡ-ಮರ ಬೆಳೆಸುವಜತೆಗೆ ಪರಿಸರದ ಬಗ್ಗೆ ಕಾಳಜಿ ಬೆಳೆಸಿಕೊಂಡು ಪೂರಕ ವಾತಾವರಣ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಸಂಘದ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕೃಷಿ ಇಲಾಖೆ ಅಧಿಕಾರಿ ತಿಪ್ಪೇಸ್ವಾಮಿ, ಸ್ಥಳೀಯರಾದ ಶಿವಪ್ರಕಾಶ್, ರವೀಂದ್ರ, ವಿಜಯಕುಮಾರ್, ಸುರೇಶ್, ವಿಶ್ವನಾಥ್, ಭರತ್, ಜಗತ್‌ಸಿಂಗ್, ಪ್ರಕಾಶ್, ನಾಗರಾಜ್ ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.