ADVERTISEMENT

ಗೋಶಾಲೆಗೆ ಸೌಲಭ್ಯಕ್ಕೆ ಗ್ರಾಮಸ್ಥರ ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2012, 19:30 IST
Last Updated 8 ಅಕ್ಟೋಬರ್ 2012, 19:30 IST

ಕೃಷ್ಣರಾಜಪೇಟೆ: ತಾಲ್ಲೂಕನ್ನು ಬರ ಪೀಡಿತ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಶೀಳನೆರೆಯಲ್ಲಿ ಜಿಲ್ಲಾಡಳಿತದ ವತಿಯಿಂದ ತೆರೆದಿರುವ ಗೋಶಾಲೆಗೆ ಸಮರ್ಪಕ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಜಾನವಾರುಗಳೊಂದಿಗೆ ಸೋಮವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಸ್.ಆರ್.ದಿನೇಶ್ ನೇತೃತ್ವದಲ್ಲಿ ಶೀಳನೆರೆ ಗ್ರಾಮದ ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಎದುರು ಜಾನುವಾರುಗಳ ಸಹಿತ ಧರಣಿ ನಡೆಸಿದ ಗ್ರಾಮಸ್ಥರು, ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ನಿರ್ದೇಶನದಂತೆ ಗ್ರಾಮದಲ್ಲಿ ಗೋಶಾಲೆ ಆರಂಭಿಸಲಾಗಿದೆ. ಆದರೆ ಗೋವುಗಳಿಗೆ ಮೇವು, ನೆರಳು, ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸಿಲ್ಲ. ಜಾನುವಾರುಗಳಿಗೆ ದಾಸ್ತಾನು ಮಾಡಿರುವ ಒಣಮೇವಿನ ಪ್ರಮಾಣ ತೀರಾ ಕಡಿಮೆಯಿದೆ. ರಾಸುಗಳಿಗೆ ಮೇವು ವಿತರಿಸಲು ಸಂಬಂಧಿಸಿದ ಅಧಿಕಾರಿಗಳೇ ಇಲ್ಲ ಎಂದರು.

ಮಳೆಯಾಶ್ರಿತ ಪ್ರದೇಶವಾದ ಹೋಬಳಿಯಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ಬೆಳೆ ಸಂಪೂರ್ಣ ಕೈಕೊಟ್ಟಿದ್ದು, ರೈತರು ಜಾನುವಾರುಗಳಿಗೆ ನೀರು, ಮೇವು ಪೂರೈಸಲಾಗದೆ ಕಂಗಾಲಾಗಿದ್ದಾರೆ ಎಂದು ರೈತರು ಅಳಲು ತೋಡಿಕೊಂಡರು..ಶಿವರಾಮು, ಜಯರಾಮು, ಹೋಟೆಲ್ ಲಕ್ಷ್ಮಣ, ಮಂಜು, ಸುಂದಣ್ಣ, ದಿನೇಶ್, ರಾಮು, ಮನು, ಪ್ರಕಾಶ್ ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.