ADVERTISEMENT

ಗ್ರಾಮ ಪಂಚಾಯತಿ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2011, 19:30 IST
Last Updated 23 ನವೆಂಬರ್ 2011, 19:30 IST
ಗ್ರಾಮ ಪಂಚಾಯತಿ ನೌಕರರ ಪ್ರತಿಭಟನೆ
ಗ್ರಾಮ ಪಂಚಾಯತಿ ನೌಕರರ ಪ್ರತಿಭಟನೆ   

ಚಿಕ್ಕಬಳ್ಳಾಪುರ:  ಗ್ರಾಮ ಪಂಚಾಯಿತಿ ನೌಕರರಿಗೆ ಮಾಸಿಕ ವೇತನದ ಜತೆಗೆ ಭತ್ಯೆ ನೀಡುವುದು, ಸರ್ಕಾರಿ ಸೌಕರ್ಯಗಳನ್ನು ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಗ್ರಾಮ ಪಂಚಾಯಿತಿ ನೌಕರರು ಬುಧವಾರ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.

ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಸುಮಾರು 8 ಕಿ.ಮೀ. ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, `ಬೇಡಿಕೆಗಳು ಈಡೇರಿಸುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ~ ಎಂದು ಎಚ್ಚರಿಕೆ ನೀಡಿದರು.

ಬಿಲ್ ಕಲೆಕ್ಟರ್, ವಾಟರ್‌ಮ್ಯಾನ್, ವೈರ್‌ಮ್ಯಾನ್‌ಗಳಿಗೆ ನಿಗದಿತ ವೇತನ ನೀಡಬೇಕು, ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದರೂ ಇಲ್ಲಿನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ ಮಾತನಾಡಿ, `ಜಿ.ಪಂ. ಸಿಇಒ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾ.ಪಂ. ನೌಕರರಿಗೆ ಯಾವುದೇ ರೀತಿಯ ಮಾನ್ಯತೆ ನೀಡುತ್ತಿಲ್ಲ. ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇದರಿಂದ ಇನ್ನಷ್ಟು ಸಮಸ್ಯೆ ಉದ್ಭವಿಸಿದೆ. ಸರ್ಕಾರಿ ಮತ್ತು ಸಚಿವರ ಭರವಸೆಗಳನ್ನು ಈ ಅಧಿಕಾರಿಗಳು ಅನುಷ್ಠಾನಕ್ಕೆ ತರುತ್ತಿಲ್ಲ~ ಎಂದು ದೂರಿದರು.

`ಬೇಡಿಕೆಗಳು ಈಡೇರಿಸುವವರೆಗೆ ಪ್ರತಿಭಟನೆ ಮುಂದುವರಿಸ ಲಾಗುವುದು. ಜಿಲ್ಲೆಯ ಆರು ತಾಲ್ಲೂಕುಗಳ ಗ್ರಾಮ ಪಂಚಾಯಿತಿ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಮುಂದಿನ ದಿನಗಳಲ್ಲಿ ಪ್ರತಿಭಟನೆ ಇನ್ನಷ್ಟು ತೀವ್ರಗೊಳಿಸಲಾಗುವುದು~ ಎಂದು ಅವರು ತಿಳಿಸಿದರು.

ಸಂಘದ ಮುಖಂಡರಾದ ಬಿ.ಎನ್.ಮುನಿಕೃಷ್ಣಪ್ಪ, ಸಿದ್ದಗಂಗಪ್ಪ, ಕೃಷ್ಣಪ್ಪ, ಸುಧಾಕರ, ಎ.ಎಲ್.ನರಸಿಂಹಮೂರ್ತಿ, ಸುದರ್ಶನ್ ಮತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.