ಚಿಕ್ಕಮಗಳೂರು: ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ ಅಂಬಳೆ ಕ್ಷೇತ್ರದ ಕನಕರಾಜ್ ಅರಸ್ ಮತ್ತು ಉಪಾಧ್ಯಕ್ಷರಾಗಿ ದೇವದಾನ ಕ್ಷೇತ್ರದ ಯೋಗಾನಂದ ಸೋಮವಾರ ಅವಿರೋಧವಾಗಿ ಆಯ್ಕೆಯಾದರು. ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪಕ್ಷದ ಮುಖಂಡರು ಮತ್ತು ಅಂಬಳೆ ಕ್ಷೇತ್ರದ ಕಾರ್ಯಕರ್ತರು ಅರಸ್ ಅವರಿಗೆ ಹಾರ ಹಾಕಿ ಅಭಿನಂದಿಸಿದರು.
ನಂತರ ಮಾತನಾಡಿದ ಶಾಸಕ ಸಿ.ಟಿ.ರವಿ, ಪಕ್ಷದ ಒತ್ತಾಯದ ಮೇರೆಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಕನಕರಾಜ್ ಅರಸ್ ಈಗ ತಾ.ಪಂ ಅಧ್ಯಕ್ಷರಾಗಿದ್ದಾರೆ.ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ಒಂದು ತಂಡವಾಗಿ ಕೆಲಸ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಬೇಕು. ತಾ.ಪಂ.ಗೆ ರೂ. 2 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಪಕ್ಷ ಶಿಫಾರಸು ಮಾಡಿದೆ.
ತಾಲ್ಲೂಕನ್ನು ರಾಜ್ಯದಲ್ಲಿಯೇ ಅಭಿವೃದ್ಧಿಯಲ್ಲಿ ಮೊದಲನೇ ಸ್ಥಾನಕ್ಕೆ ಕೊಂಡೊಯ್ಯಬೇಕು ಎಂದು ಉತ್ತೇಜಿಸಿದರು.ಕಚ್ಚಾಟ ಬಿಟ್ಟು ಅಭಿವೃದ್ಧಿಗೆ ಒತ್ತು ನೀಡೋಣ ಎಂದ ಕನಕರಾಜ್, ಹೆಚ್ಚಿನ ಅನುದಾನ ದೊರಕಿಸಿಕೊಡಲು ಶಾಸಕರು ಗಮನಹರಿಸಬೇಕು ಎಂದು ಮನವಿ ಮಾಡಿದರು.
ನೂತನ ಉಪಾಧ್ಯಕ್ಷ ಯೋಗಾನಂದ, ಆಡಳಿತ ಪಕ್ಷದ ಸದಸ್ಯ ಪುಟ್ಟೇಗೌಡ ಮಾತನಾಡಿದರು. ಕಾಂಗ್ರೆಸ್ನ ಎಚ್.ಎಸ್.ಕೃಷ್ಣೇಗೌಡ, ಜೆಡಿಎಸ್ನ ಮಹೇಶ್, ಈರಮ್ಮ, ತಾಲ್ಲೂಕು ಪಂಚಾಯಿತಿ ಆಡಳಿತ ಮತ್ತು ಅಭಿವೃದ್ಧಿ ಕೆಲಸಗಳಿಗೆ ಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಬಿಜೆಪಿ ಜಿಲ್ಲಾ ಘಟಕ ಕಾರ್ಯದರ್ಶಿ ವರಸಿದ್ದಿ ವೇಣುಗೋಪಾಲ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.