ADVERTISEMENT

ಚಿನ್ನಾಭರಣ ವ್ಯಾಪಾರಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2012, 19:30 IST
Last Updated 26 ಮಾರ್ಚ್ 2012, 19:30 IST

ತುಮಕೂರು: ಚಿನ್ನಾಭರಣಗಳ ಮೇಲೆ ಕೇಂದ್ರ ಸರ್ಕಾರ ವಿಧಿಸಿರುವ ಹೆಚ್ಚುವರಿ ತೆರಿಗೆ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಜ್ಯುವೆಲ್ಲರಿ ಅಂಗಡಿ ಮಾಲೀಕರು ಹಾಗೂ ಆಭರಣ ತಯಾರಕರು ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಜ್ಯುವೆಲ್ಲರಿಅಸೋಸಿಯೇಷನ್, ಬ್ಯಾಂಕರ್ ಮತ್ತು ಜ್ಯುವೆಲ್ಲರಿ ಅಸೋಸಿಯೇಷನ್ ಹಾಗೂ ಚಿನ್ನಬೆಳ್ಳಿ ಕೆಲಸಗಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಕೈಗೆ ಕಪ್ಪುಬಟ್ಟೆ ಕಟ್ಟಿಕೊಂಡು ಮೌನ ವೆುರವಣಿಗೆ ನಡೆಸಿದರು. ಮೆರವಣಿಗೆಯು ಟೌನ್‌ಹಾಲ್ ವೃತ್ತದ ಮೂಲಕ ವಿವಿಧ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ಸೇರಿತು. ಕೇಂದ್ರ ಸರ್ಕಾರವು ಚಿನ್ನಾಭರಣಗಳ ಮೇಲೆ ಅಬಕಾರಿ ಸುಂಕ ವಿಧಿಸಿದೆ. ಜೊತೆಗೆ ವಿವಿಧ ತೆರಿಗೆಗಳನ್ನು ಹಾಕಿರುವುದು ಸರಿಯಲ್ಲ. ಇದರಿಂದ ಚಿನ್ನಾಭರಣ ಖರೀದಿದಾರರಿಗೆ ಹೊರೆಯಾಗುತ್ತದೆ ಎಂದು ಆರೋಪಿಸಿದರು.

ವಿಧಿಸಿರುವ ತೆರಿಗೆ ವಾಪಸ್ ಪಡೆಯದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಜ್ಯುವೆಲ್ಲರಿ ಅಸೋಸಿಯೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕುಮಾರ್, ಬ್ಯಾಂಕರ್ ಮತ್ತು ಜ್ಯುವೆಲ್ಲರಿ ಅಸೋಸಿಯೇಷನ್ ಅಧ್ಯಕ್ಷ ಕಿಶೋರ್‌ಕುಮಾರ್, ಚಿನ್ನಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಕೆ.ವಿ.ಗೋವರ್ಧನ್ ಮತ್ತಿತರರು ಇದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.