ADVERTISEMENT

ಜಲಪಾತಕ್ಕೆ ಬಿದ್ದು ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2012, 19:30 IST
Last Updated 4 ಫೆಬ್ರುವರಿ 2012, 19:30 IST

ಸಕಲೇಶಪುರ: ಪಶ್ಚಿಮಘಟ್ಟದ ಕಬ್ಬಿನಾಲೆ ರಕ್ಷಿತ ಅರಣ್ಯದಲ್ಲಿ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಕಾಲು ಜಾರಿ ಜಲಪಾತಕ್ಕೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ನವೀನ್‌ಕುಮಾರ್ (21) ಮೃತಪಟ್ಟ ವಿದ್ಯಾರ್ಥಿ. ದಕ್ಷಿಣ ಕನ್ನಡ ಜಿಲ್ಲೆ ಉಪ್ಪನಂಗಡಿ ವಲಯ ಅರಣ್ಯ ವ್ಯಾಪ್ತಿಯ ಗುಂಡ್ಯಾ ಕಡೆಯಿಂದ ಬೆಳಿಗ್ಗೆ 14 ಮಂದಿಯ ಯುವಕರ ತಂಡ ಕಾಡಿನೊಳಗೆ ಚಾರಣಕ್ಕೆ ತೆರಳಿದ್ದರು ಎನ್ನಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಸಕಲೇಶಪುರ ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಕಬ್ಬಿನಾಲೆ ರಕ್ಷಿತ ಅರಣ್ಯ ತಲುಪಿದ್ದಾರೆ. ಅಡ್ಡಹೊಳೆಯ ಕಿರು ಜಲಪಾತವೊಂದರಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆ ಸಂಭವಿಸಿದ ಕೂಡಲೆ ಇಬ್ಬರು ವಿದ್ಯಾರ್ಥಿಗಳು ಕಾಡಿನಿಂದ ಹೊರಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಮೊಬೈಲ್ ನೆಟ್‌ವರ್ಕ್ ಸಂಪರ್ಕ ಇಲ್ಲದೆ ಇರುವುದರಿಂದ 11 ಯುವಕರು ಹೊರ ಜಗತ್ತಿನ ಸಂಪರ್ಕ ಕಡಿದುಕೊಂಡಿದ್ದಾರೆ. ಇನ್ಸ್‌ಪೆಕ್ಟರ್ ಗಣೇಶ್ ಹಾಗೂ ಗ್ರಾಮಾಂತರ ಠಾಣೆ ಪಿಎಸ್‌ಐ ರಾಜು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅವರನ್ನೂ ಸಹ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ.  `ಅರಣ್ಯ ಇಲಾಖೆ ಪರವಾನಗಿ ಪಡೆಯದೆ 14 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಕಬ್ಬಿನಾಲೆ ಕಾಯ್ದಿರಿಸಿದ ಅರಣ್ಯದಲ್ಲಿ ಚಾರಣ ನಡೆಸಿದ್ದಾರೆ ಎಂಬುದು ವಿದ್ಯಾರ್ಥಿ ನವೀನ್‌ಕುಮಾರ್ ಮೃತಪಟ್ಟ ಘಟನೆಯ ನಂತರವಷ್ಟೇ ತಮ್ಮ ಗಮನಕ್ಕೆ ಬಂದಿದೆ~ ಎಂದು ವಲಯ ಅರಣ್ಯ ಅಧಿಕಾರಿ ರತ್ನಪ್ರಭ `ಪ್ರಜಾವಾಣಿ~ಗೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.