ADVERTISEMENT

ಜೆಡಿಎಸ್ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2011, 19:30 IST
Last Updated 13 ಫೆಬ್ರುವರಿ 2011, 19:30 IST

ಮಡಿಕೇರಿ: ಮೈಸೂರು ಜಿ.ಪಂ. ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧಿಕಾರ ಲಾಲಸೆಗಾಗಿ  ಬಿಜೆಪಿ ಜೊತೆ ಕೈಜೋಡಿಸಿದ ಜೆಡಿಎಸ್‌ನ ದ್ವಿಮುಖ ಧೋರಣೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ  ವತಿಯಿಂದ ಭಾನುವಾರ ನಗರದ ಗಾಂಧಿ ಪ್ರತಿಮೆ ಬಳಿ ಸಾಂಕೇತಿಕ ಪ್ರತಿಭಟನೆ ನಡೆಯಿತು.

‘ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನಗಳನ್ನು ಗೆದ್ದಿದ್ದರೂ ಜನಾದೇಶಕ್ಕೆ  ತಲೆಬಾಗದೆ, ಮುಖ್ಯಮಂತ್ರಿಗಳ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವ ಜೆಡಿಎಸ್  ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದ ಗದ್ದುಗೆ ಏರಿರುವುದು ಅನುಕೂಲ ಸಿಂಧು ರಾಜಕಾರಣಕ್ಕೆ ನಿದರ್ಶನವಾಗಿದೆ’ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಬಿ.ಟಿ.ಪ್ರದೀಪ್ ಟೀಕಿಸಿದರು.

‘ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿಗೆ ಏಳೆಂಟು ಸ್ಥಾನಗಳ ಕೊರತೆ  ಎದುರಾದರೂ ಕಾಂಗ್ರೆಸ್ ಜನಾದೇಶಕ್ಕೆ ತಲೆಬಾಗಿತು. ಆದರೆ, ಸಮ್ಮಿಶ್ರ ಸರ್ಕಾರ ರಚನೆ ಸಂದರ್ಭದಲ್ಲಿ  ಕೈಕೊಟ್ಟ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡ ಬಿಜೆಪಿ ಕೂಡ ಪ್ರಜಾಪ್ರಭುತ್ವದ ಮೌಲ್ಯಗಳಿಗೆ  ತಿಲಾಂಜಲಿಯನ್ನು ಇಟ್ಟಿರುವುದು ಕಳವಳಕಾರಿ ಸಂಗತಿ’ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಅಬ್ದುಲ್ ರೆಹಮಾನ್, ಜಿ.ಪಂ. ಸದಸ್ಯ ಎಂ.ಎಸ್. ವೆಂಕಟೇಶ್, ನಗರಸಭಾ ಸದಸ್ಯ ಟಿ.ಎಂ. ಅಯ್ಯಪ್ಪ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಬಿ. ಗಣೇಶ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಲ್ಯದ ಗಿರೀಶ್, ವಿರಾಜಪೇಟೆ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಸತೀಶ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.