ಚಿಕ್ಕಮಗಳೂರು: ಭ್ರಷ್ಟಾಚಾರ ವಿರೋಧಿಸಿ, ಲೋಕಾಯುಕ್ತರ ನೇಮಕ ವಿಳಂಬ ಖಂಡಿಸಿ ಗುರುವಾರ ತಾಲ್ಲೂಕು ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ 15 ಮಂದಿ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು, ನಂತರ ಬಿಡುಗಡೆಗೊಳಿಸಿದರು.
ಯುವ ಕಾಂಗ್ರೆಸ್ ರಾಜ್ಯದಾದ್ಯಂತ ತಾಲ್ಲೂಕು ಕಚೇರಿ ಮುತ್ತಿಗೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ನಗರದ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ನಗರ ಕಾಂಗ್ರೆಸ್ ಕಾರ್ಯಕರ್ತರಾದ ಸಿ.ಎಸ್.ಸಂದೀಪ, ಶಿವಕುಮಾರ್, ಪುಷ್ಪಲತಾ, ವಿನೋದ್ಕುಮಾರ್,ಸಂತೋಷ್ ಸೇರಿ 15 ಮಂದಿಯನ್ನು ನಗರ ಠಾಣೆ ಪೊಲೀಸರು ವಶಕ್ಕೆ ತಗೆದುಕೊಂಡರು.
ಸರ್ಕಾರ ಲೋಕಾಯುಕ್ತರನ್ನು ಶೀಘ್ರ ನೇಮಿಸಬೇಕು. ಕೆಳ ಹಂತದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಗಟ್ಟಬೇಕು. ರೈತರಿಗೆ ಸಮರ್ಪಕ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸರಬರಾಜು ಮಾಡಲು ಕ್ರಮ ಕೈಗೊಳ್ಳಲು ಒತ್ತಾಯಿಸಿದರು.
ಈ ಎಲ್ಲ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹಲವು ಬಾರಿ ಪ್ರತಿಭಟನೆ ನಡೆಸಿ, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಯುವ ಕಾಂಗ್ರೆಸ್ ನೇತೃತ್ವದಲ್ಲಿ ತಾಲ್ಲೂಕು ಕಚೇರಿ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಯಿತು ಎಂದು ಪ್ರತಿಭಟನಾನಿರತರು ಮನವಿಯಲ್ಲಿ ತಿಳಿಸಿದ್ದಾರೆ.
ಭ್ರಷ್ಟಾಚಾರ ನಿಯಂತ್ರಿಸಲು, ಅಗತ್ಯ ಬಿತ್ತನೆಬೀಜ ಮತ್ತು ರಸಗೊಬ್ಬರ ಪೂರೈಸಲು, ಬಿಪಿಎಲ್ ಕಾರ್ಡ್ ವಿತರಣೆ ಹಾಗೂ ವೃದ್ಧಾಪ್ಯ, ಅಂಕವಿಲಕರ, ವಿಧವಾ ವೇತನ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ವಿಫಲವಾದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ರೂಪಿಸಬೇಕಾಗುತ್ತದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.