ಗದಗ: ಬಿ. ಶ್ರೀರಾಮುಲು ಅಭಿಮಾನಿ ಬಳಗದ ವತಿಯಿಂದ ಇಲ್ಲಿನ ವಿದ್ಯಾದಾನ ಸಮಿತಿ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ 750 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಇದರಲ್ಲಿ 38 ಮುಸ್ಲಿಂ ಜೋಡಿಗಳಿದ್ದವು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಬಿ. ಶ್ರೀರಾಮುಲು `ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಇಡೀ ರಾಜ್ಯದಾದ್ಯಂತ ವಿಸ್ತರಣೆ ಮಾಡುವ ಆಲೋಚನೆ ಇದೆ. ಇಂತಹ ಧರ್ಮ ಕಾರ್ಯ ನನ್ನೊಂದಿಗೆ ಕೊನೆಯಾಗುವುದಿಲ್ಲ. ನನ್ನ ಮಕ್ಕಳು, ಮೊಮ್ಮಕ್ಕಳು ಕೂಡಾ ಮುಂದುವರೆಸಿಕೊಂಡು ಹೋಗುತ್ತಾರೆ~ ಎಂದು ಹೇಳುತ್ತಾ ಭಾವುಕರಾದರು.
`12 ವರ್ಷದ ಹಿಂದೆ ಸಾಮೂಹಿಕ ವಿವಾಹ ಕಾರ್ಯಕ್ರಮ ಪ್ರಾರಂಭಿಸಿದಾಗ ನನಗೆ ಅಧಿಕಾರ ಇರಲಿಲ್ಲ, ಹಣಕಾಸಿನ ಬಲವೂ ಇರಲಿಲ್ಲ. ಜನರ ವಿಶ್ವಾಸದ ಬಲದಿಂದಲೇ ಇಷ್ಟು ದೊಡ್ಡ ಮಟ್ಟದಲ್ಲಿ ವಿವಾಹ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಾ ಬರುತ್ತಿದ್ದೇವೆ~ ಎಂದು ಹಳೆಯದ್ದನ್ನು ನೆನಪಿಸಿಕೊಂಡರು.
ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ, ಫಕೀರ ಸಿದ್ದರಾಮ ಸ್ವಾಮೀಜಿ, ಕಲ್ಲಯ್ಯಜ್ಜ, ಶಿವಶಾಂತವೀರ ಶರಣರು ಸಾನ್ನಿಧ್ಯವಹಿಸಿದ್ದರು. ಬಿ. ಶ್ರೀರಾಮುಲು ಅಭಿಮಾನಿ ಬಳಗದ ಅಧ್ಯಕ್ಷ ವಿಜಯಕುಮಾರ ಗಡ್ಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಶಾಸಕರಾದ ಕಳಕಪ್ಪ ಬಂಡಿ, ಶ್ರೀಶೈಲಪ್ಪ ಬಿದರೂರ, ರಾಮಣ್ಣ ಲಮಾಣಿ, ಮೋಹನ ಲಿಂಬಿಕಾಯಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.